ಸ್ವಾಯತ್ತ ಆರೋಗ್ಯ ಸಂಸ್ಥೆಗಳಿಗೆ ಹೆಚ್ಚು ಅನುದಾನ
Team Udayavani, Jan 19, 2019, 6:12 AM IST
ಬೆಂಗಳೂರು: ಇಂದಿರಾಗಾಂ ಧಿ ಮಕ್ಕಳ ಆರೋಗ್ಯ ಸಂಸ್ಥೆ, ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆ, ಸಂಜಯ್ಗಾಂ ಧಿ ತುರ್ತು ಚಿಕಿತ್ಸಾ ಕೇಂದ್ರ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗಳಿಗೆ ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಸ್ಥಿಮಜ್ಜೆ ಕಸಿ ಚಿಕಿತ್ಸಾ ಘಟಕದ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ಉತ್ತಮ ವೈದ್ಯಕೀಯ ಸೇವೆ ನೀಡಲು ಸ್ವಾಯತ್ತ ಸಂಸ್ಥೆಗಳಿಗೆ ಇನ್ನಷ್ಟು ಬಲ ತುಂಬುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆ ಮಾದರಿಯಲ್ಲಿ ಉತ್ತರ ಕರ್ನಾಟಕದ ವಿವಿಧೆಡೆ ಜಯದೇವ ಹೃದ್ರೋಗ ಸಂಸ್ಥೆ ಸ್ಥಾಪನೆಗೆ ಬೇಡಿಕೆ ಇದೆ. ಈ ಕುರಿತು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ಕ್ಯಾನ್ಸರ್ನಿಂದ ಬಳಲುತ್ತಿರುವ ಬಡವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಶುಲ್ಕ ನೀಡಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಕ್ಯಾನ್ಸರ್ನಿಂದ ಬಳಲುತ್ತಿರುವ ಅನೇಕ ಬಡ ಮಕ್ಕಳು ಹಾಗೂ ಅವರ ಪೋಷಕರು ಅಸ್ಥಿಮಜ್ಜೆ ಚಿಕಿತ್ಸೆಗಾಗಿ ನೆರವು ಕೋರಿ ಜನತಾದರ್ಶನ ವೇಳೆ ನನ್ನ ಬಳಿ ಬರುತ್ತಿದ್ದಾರೆ. ಅಂತಹ ಬಡವರಿಗೆ ಉಚಿತವಾಗಿ ಅಸ್ಥಿಮಜ್ಜೆ ಚಿಕಿತ್ಸೆ ದೊರೆಯಲಿ ಎಂಬ ಉದ್ದೇಶದಿಂದ 12 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿಯಲ್ಲಿ ದೇಶದಲ್ಲೇ ಅತೀ ದೊಡ್ಡ “ಅಸ್ತಿಮಜ್ಜೆ ಚಿಕಿತ್ಸಾ ಘಟಕ’ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.
ಕಳೆದ ಏಳು ತಿಂಗಳಲ್ಲಿ ಕಿದ್ವಾಯಿ ಸಂಸ್ಥೆಗೆ ಮೂರು ಬಾರಿ ಭೇಟಿ ನೀಡಿದ್ದೇನೆ. ಸಂಸ್ಥೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದೆ. ಆಸ್ಪತ್ರೆಗೆ ಸಾಕಷ್ಟು ದಾನಿಗಳು ನೆರವು ನೀಡುತ್ತಿದ್ದಾರೆ. ಈಗಾಗಲೇ ಮೂರು ಅಂತಸ್ತಿನ ಕಟ್ಟಡ ನಿರ್ಮಿಸಿಕೊಟ್ಟಿರುವ ಶಿಫಾನಿ ಹಾಗೂ ದಾಗ ಕುಟುಂಬ ಇನ್ನೂ ಮೂರು ಅಂತಸ್ಥಿತ ಕಟ್ಟಡ ನಿರ್ಮಿಸಿಕೊಡಲು ಮುಂದೆ ಬಂದಿದೆ. ಇದರೊಂದಿಗೆ ಸಂಸ್ಥೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ ಸಿ.ರಾಮಚಂದ್ರ ಮಾತನಾಡಿ, 15 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಆಸ್ಪತ್ರೆಯ ಜಿಂದಾಲ್ ಬ್ಲಾಕ್ನ ಮೂರನೇ ಮಹಡಿ ಮೇಲಿರುವ ಸ್ಥಳದಲ್ಲಿ ನೂತನ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಘಟಕವು 20 ಪ್ರತ್ಯೇಕ ಸುಸಜ್ಜಿತ ಕೊಠಡಿಗಳು, ಮೂರು ಕಿರು ಶಸ್ತ್ರಚಿಕಿತ್ಸಾ ಘಟಕಗಳು, ವೈದ್ಯರ ವಿಶ್ರಾಂತಿ ಕೊಠಡಿ ಹೊಂದಿರಲಿದ್ದು,
2.3 ಕೋಟಿ ರೂ. ಮೌಲ್ಯದ ಯಂತ್ರೋಪಕರಣಗಳನ್ನು ಇಲ್ಲಿ ಅಳವಡಿಸಲಾಗುವುದು. ಆರು ತಿಂಗಳೊಳಗೆ ಕೇಂದ್ರ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು. ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ, ಮೇಯರ್ ಗಂಗಾಂಬಿಕೆ, ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಡಾ.ಕೆ.ಬಿ.ಲಿಂಗೇಗೌಡ ಉಪಸ್ಥಿತರಿದ್ದರು.
ಏನಿದು ಅಸ್ಥಿಮಜ್ಜೆ ಕಸಿ ಚಿಕಿತ್ಸೆ?: ಮೂಳೆಗಳ ಮಧ್ಯದಲ್ಲಿನ ಸ್ಪಂಜಿನಂತಹ ಭಾಗದಲ್ಲಿರುವ ಅಂಗಾಂಶವೇ ಅಸ್ಥಿಮಜ್ಜೆ. ಇದರಲ್ಲಿ ನಿತ್ಯ ಸುಮಾರು 200 ಕೋಟಿಯಷ್ಟು ಕೆಂಪು, ಬಿಳಿ ರಕ್ತ ಕಣಗಳು ಉತ್ಪಾದನೆಯಾಗುತ್ತವೆ. ಕೆಂಪು ರಕ್ತ ಕಣಗಳು ಜೀವಕೋಶಗಳಿಗೆ ಆಮ್ಲಜನಕ ಸರಬರಾಜು ಮಾಡಿದರೆ, ಬಿಳಿ ರಕ್ತ ಕಣಗಳು ರೋಗಾಣುಗಳನ್ನು ಸೆದೆಬಡಿಯುತ್ತವೆ. ಇವುಗಳನ್ನು ದೇಹದ ಒಂದು ಭಾಗದಿಂದ ಮತ್ತೂಂದು ಭಾಗಕ್ಕೆ ಅಥವಾ ವ್ಯಕ್ತಿಯಿಂದ ವ್ಯಕ್ತಿಗೆ ಕಸಿ ಮಾಡುವುದೇ ಅಸ್ಥಿಮಜ್ಜೆ ಕಸಿ ಚಿಕಿತ್ಸೆ.
ಈಗ ನಿರ್ಮಾಣವಾಗುತ್ತಿರುವ ಚಿಕಿತ್ಸಾ ಘಟಕದಲ್ಲಿ ವೈದ್ಯರು ಆರೋಗ್ಯವಂತ ವ್ಯಕ್ತಿಯ ದೇಹದಿಂದ ಅಸ್ಥಿಮಜ್ಜೆಯನ್ನು ತೆಗೆದು, ಲ್ಯುಕೇಮಿಯಾ, ಲಿಂಫೋಮೊ ಮತ್ತು ಅನೀಮಿಯಾದಂತಹ ರಕ್ತದ ಕ್ಯಾನ್ಸರ್ ಹೊಂದಿರುವ ವ್ಯಕ್ತಿಯ ದೇಹದ ಮೂಳೆಗಳ ನಾಳಗಳಲ್ಲಿ ತುಂಬುತ್ತಾರೆ. ವಿಕಿರಣ ಚಿಕಿತ್ಸೆ ಬಳಿಕವೂ ಕ್ಯಾನ್ಸರ್ ಅಂಶ ಉಳಿದಿದ್ದರೆ, ಹೊಸ ಮಜ್ಜೆ ತುಂಬಿದ ಬಳಿಕ ಅದು ವಾಸಿಯಾಗುತ್ತದೆ.
ಅಸ್ಥಿಮಜ್ಜೆ ಕಸಿ ಚಿಕಿತ್ಸೆಯಲ್ಲಿ ಎರಡು ವಿಧಗಳಿವೆ. ರೋಗಿಯಿಂದಲೇ ಮಜ್ಜೆ ತೆಗೆದು ಕಸಿ ಮಾಡುವುದನ್ನು ಅಟೊಲೊಗೊಸ್ಎಂದು, ಆರೋಗ್ಯವಂತ ವ್ಯಕ್ತಿಯಿಂದ ಮಜ್ಜೆ ತೆಗೆದು ರೋಗಿಗೆ ಕಸಿ ಮಾಡುವ ವಿಧಾನವನ್ನು ಅಲೋಜಿನಿಕ್ ಎಂದು ಕರೆಯಲಾಗುತ್ತದೆ. ಈ ಎರಡೂ ಕಸಿ ಚಿಕಿತ್ಸೆಗಳು ನೀತನ ಘಟಕದಲ್ಲಿ ಲಭ್ಯವಾಗಲಿವೆ. ಈ ಮೂಲಕ ಖಾಸಗಿ ಆಸ್ಪತ್ರೆಗಳಲ್ಲಿ 35 ಲಕ್ಷ ರೂ. ಶುಲ್ಕ ವಿಧಿಸಲಾಗುವ ಅಸ್ಥಿಮಜ್ಜೆ ಕಸಿ ಚಿಕಿತ್ಸೆ, ಕಿದ್ವಾಯಿಯಲ್ಲಿ ಬಿಪಿಎಲ್ ಕುಟುಂಬದ ರೋಗಿಗಳಿಗೆ ಉಚಿತವಾಗಿ ಹಾಗೂ ಇತರರಿಗೆ ಖಾಸಗಿ ಆಸ್ಪತ್ರೆ ಶುಲ್ಕದ ಅರ್ಧ ವೆಚ್ಚದಲ್ಲಿ ದೊರೆಯಲಿದೆ.
ಕಸಿ ಚಿಕಿತ್ಸಾ ಕೇಂದ್ರ ನಿರ್ಮಾಣವಾದ ಬಳಿಕ ನುರಿತ ತಜ್ಞರ ಅಗತ್ಯವಿರುತ್ತದೆ. ಇದಕ್ಕಾಗಿ ಇಬ್ಬರು ನುರಿತ ತಜ್ಞರು, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಇಬ್ಬರು ಹಿರಿಯ ಸ್ಥಾನೀಯ ವೈದ್ಯಾಧಿಕಾರಿಗಳು, ತಂತ್ರಜ್ಞರು ಹಾಗೂ ರೋಗಶಾಸ್ತ್ರಜ್ಞರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸಿ.ರಾಮಚಂದ್ರ ತಿಳಿಸಿದರು.
ಸಿದ್ಧಗಂಗಾ ಶ್ರೀಗಳಿಗೆ “ಭಾರತರತ್ನ’ ನೀಡಲು ಪ್ರಧಾನಿಗೆ ಮನವಿ: ಸದ್ಯದ ಮಾಹಿತಿ ಪ್ರಕಾರ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ತುಮಕೂರಿನ ವೈದ್ಯರ ಜತೆಗೆ ಬೆಂಗಳೂರಿನ ತಜ್ಞ ವೈದ್ಯರ ತಂಡ ಕೂಡ ಪರೀಕ್ಷೆ ನಡೆಸಿದೆ. ಶ್ರೀಗಳು ಪವಾಡ ಪುರುಷರು. ಶಿವಭಕ್ತರಾದ ಅವರಿಗೆ ಇಚ್ಛಾ ಮರಣ ಹೊಂದುವ ಶಕ್ತಿ ಇದೆ. ಅವರ ಆರೋಗ್ಯ ಚೇತರಿಕೆಗಾಗಿ ಭಗವಂತನಲ್ಲಿ ಬೇಡಿಕೊಳ್ಳುವೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
2007ರಲ್ಲಿ ಎಪಿಜೆ ಅಬ್ದುಲ್ ಕಲಾಂ ಅವರು ರಾಷ್ಟ್ರಪತಿಯಾಗಿದ್ದಾಗ ಶ್ರೀಗಳಿಗೆ ಭಾರತರತ್ನ ನೀಡಬೇಕೆಂದು ಮನವಿ ಮಾಡಿದ್ದೆ. ಆ ನಂತರವೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಪತ್ರ ಬರೆದಿದ್ದೇನೆ. ಈಗ ಮತ್ತೂಮ್ಮೆ ಕೇಂದ್ರಕ್ಕೆ ಪತ್ರ ಬರೆಯುವೆ. ಅಗತ್ಯ ಬಿದ್ದರೆ, ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ