ರಘುಮೂರ್ತಿಗೆ ಸಚಿವ ಸ್ಥಾನ ನೀಡದಿದ್ರೆ ಹೋರಾಟ
Team Udayavani, Jun 8, 2018, 5:12 PM IST
ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಜಿಲ್ಲಾ
ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಕೆಪಿಸಿಸಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ಶಾಸಕ ಟಿ. ರಘುಮೂರ್ತಿ ಅವರಿಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆಂಬ ನಂಬಿಕೆಯಲ್ಲಿದ್ದೆವು. ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ವರಿಷ್ಠರು ರಘುಮೂರ್ತಿ ಅವರನ್ನು ಕೈಬಿಟ್ಟಿರುವುದು ಹಿಂದುಳಿದ ಜಿಲ್ಲೆಗೆ ಅನ್ಯಾಯ ಮಾಡಿದಂತಾಗಿದೆ. ಈಗಲೂ ಕಾಲ ಮಿಂಚಿಲ್ಲ, ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪ್ರತಿಭಟನಾಕಾರರು ಗುಡುಗಿದರು.
ಚಳ್ಳಕೆರೆಯಲ್ಲಿ ರಸ್ತೆ ಅಗಲೀಕರಣಗೊಳಿಸಿ ಬೇರೆ ಊರಿನವರು ಅಲ್ಲಿಗೆ ಹೋದರೆ ವಿಸ್ಮಯಪಡುವಂತ ರೀತಿಯಲ್ಲಿ ನಗರವನ್ನು ಮಾರ್ಪಡಿಸಿದ್ದಾರೆ. ಅಲ್ಲದೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಚಳ್ಳಕೆರೆಗೆ ಮಂಜೂರು
ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಭಿವೃದ್ಧಿ ಪರ ಕಾಳಜಿಯುಳ್ಳ ಇವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ.
ಜಾತಿ ಪ್ರಭಾವ ಹಾಗೂ ಒತ್ತಡಕ್ಕೆ ಮಣಿದು ಜಿಲ್ಲೆಗೆ ಸಚಿವ ಸ್ಥಾನ ತಪ್ಪಿಸಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ನಮ್ಮ ನೋವನ್ನು ಅರ್ಥಮಾಡಿಕೊಂಡು ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ. ಜಗದೀಶ್, ಜಿಪಂ ಸದಸ್ಯರಾದ ಬಿ.ಪಿ. ಪ್ರಕಾಶ್ಮೂರ್ತಿ, ನರಸಿಂಹರಾಜು, ಮಾಜಿ ಅಧ್ಯಕ್ಷ ರವಿಕುಮಾರ್, ಮಾಜಿ ಸದಸ್ಯ ಜಿ.ಟಿ. ಬಾಬುರೆಡ್ಡಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ. ಸಂಪತ್ಕುಮಾರ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಡಿ. ರಾಜಪ್ಪ, ಕೆಪಿಸಿಸಿ ಮಹಿಳಾ ವಿಭಾಗದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಮೋಕ್ಷಾ ರುದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಮುನಿರಾ ಎ. ಮಕಾಂದಾರ್, ಗ್ರಾಪಂ, ತಾಪಂ, ಜಿಪಂ, ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ ಸದಸ್ಯರು, ವಿವಿಧ ಬ್ಲಾಕ್ಗಳ ಅಧ್ಯಕ್ಷರು, ಪದಾಧಿಕಾರಿಗಳು ಧರಣಿಯಲ್ಲಿ ಭಾಗವಹಿಸಿದ್ದರು.