ಸಿಎಂ ರಾಜೀನಾಮೆಗೆ ಬಿಜೆಪಿ ಒತ್ತಾಯ
Team Udayavani, Sep 12, 2017, 7:40 AM IST
ಮಡಿಕೇರಿ: ರಾಜ್ಯದಲ್ಲಿ ಅರಾಜಕತೆ ಮೂಡಲು ಕಾಂಗ್ರೆಸ್ ಸರಕಾರದ ದುರಾಡಳಿತ ಕಾರಣವೆಂದು ಆರೋಪಿಸಿರುವ ಕೊಡಗು ಜಿಲ್ಲಾ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಮನುಮುತ್ತಪ್ಪ, ರಾಜ್ಯ ಕಾಂಗ್ರೆಸ್ ಸರಕಾರ ಸಿಐಡಿ ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಡಿವೈಎಸ್ಪಿ ಗಣಪತಿ ಅವರ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ದಂತೆ ಸಚಿವ ಕೆ.ಜೆ. ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ತಪ್ಪಿದಲ್ಲಿ ರಾಜ್ಯಪಾಲರೇ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾ ಮಯ್ಯ ಅವರಿಗೆ ನೈತಿಕತೆಯ ಬಗ್ಗೆ ಮಾತನಾಡುವ ಅಧಿಕಾರವಿಲ್ಲ ಮತ್ತು ಅಧಿಕಾರದಲ್ಲಿ ಮುಂದುವರಿಯುವ ಅವಕಾಶವೂ ಇಲ್ಲವೆಂದು ಮನುಮುತ್ತಪ್ಪ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅರಾಜಕತೆ ಮಿತಿ ಮೀರಿದ್ದು, ಕೇರಳ ರಾಜ್ಯದ ಮಾದರಿಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ದಮನ ಮಾಡುವ ಷಡ್ಯಂತ್ರ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತು ವಾರಿ ಹೊತ್ತಿರುವ ವೇಣುಗೋಪಾಲ್ ಅವರು ಕೇರಳ ಸರಕಾರದಂತೆ ಆಡಳಿತ ನಡೆಸಲು ಕರ್ನಾಟಕದ ಕಾಂಗ್ರೆಸಿಗರಿಗೆ ಸಲಹೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿ ಯಾವುದೇ ಬೆದರಿಕೆಗಳಿಗೆ ಅಂಜುವುದಿಲ್ಲವೆಂದರು.
ಕರ್ನಾಟಕ ರಾಜ್ಯದ ಪ್ರತ್ಯೇಕ ಧ್ವಜ ರಚನೆಯ ಪ್ರಸ್ತಾಪದ ಮೂಲಕ ದೇಶದಲ್ಲಿ ಒಡಕು ಮೂಡಿಸಲು ಮುಂದಾಗಿದ್ದ ಕಾಂಗ್ರೆಸ್ ಸರಕಾರ ಇದೀಗ ಲಿಂಗಾಯಿತ ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಹಿಂದೂ ಸಮಾಜವನ್ನು ಒಡೆಯಲು ಮುಂದಾಗಿದೆ ಎಂದು ಆರೋಪಿಸಿದರು.