“ಸಾಲ ಮರು ಪಾವತಿಗೆ ಸಂತ್ರಸ್ತರ ಮೇಲೆ ಒತ್ತಡ ಹೇರುವಂತಿಲ್ಲ’
Team Udayavani, Sep 8, 2018, 6:00 AM IST
ಮಡಿಕೇರಿ: ರಾಷ್ಟೀಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳು ಹಾಗೂ ಖಾಸಗಿ ಬ್ಯಾಂಕ್ಗಳಿಂದ ಸಾಲ ಪಡೆದ ಸಂತ್ರಸ್ತ ಕುಟುಂಬದವರಿಗೆ ಸಾಲ ಮರುಪಾವತಿ ಮಾಡುವಂತೆ ಯಾವುದೇ ರೀತಿಯ ಒತ್ತಡ ಹೇರಬಾರದು ಎಂದು ಸಂಬಂಧಪಟ್ಟ ಬ್ಯಾಂಕ್ ಹಾಗೂ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸ್ಪಷ್ಟ ನಿರ್ದೇಶ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟೀಕೃತ ಬ್ಯಾಂಕ್, ಸಹಕಾರಿ ಸಂಸ್ಥೆ, ಖಾಸಗಿ ಹಣಕಾಸು ಸಂಸ್ಥೆ, ಲೇವಾದೇದಾರರ ಉಪಸ್ಥಿತಿಯಲ್ಲಿ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅತಿವೃಷ್ಟಿಯಿಂದ ಜಿಲ್ಲೆಯ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಇವರ ನೆರಗೆ ಸ್ಪಂದಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಸಹಜವಾಗಿ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸಾಲ ಮರು ಪಾವತಿಸುವಂತೆ ಒತ್ತಡ ಉಂಟು ಮಾಡಬಾರದು, ಇಂತಹ ದೂರುಗಳು ಕೇಳಿಬಂದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದರು.
ಮುಂದಿನ ಮೂರು ತಿಂಗಳ ವರೆಗೆ ಬ್ಯಾಂಕ್, ಸಹಕಾರ ಸಂಸ್ಥೆಗಳು, ಗಾಮೀಣ ಅಭಿವೃದ್ಧಿ ಬ್ಯಾಂಕುಗಳು ಹಾಗೂ ಖಾಸಗಿ ಹಣಕಾಸು ಸಂಸೆು§ಂದ ಪಡೆದ ಯಾವುದೇ ರೀತಿಯ ಸಾಲ ಮರು ಪಾವತಿಗೆ ಒತ್ತಡ ಹೇರಿದರೆ ಜನರು ಮತ್ತಷ್ಟು ತೊಂದರೆಗೆ ಸಿಲುಕಿದಂತಾಗುತ್ತದೆ. ಆದ್ದರಿಂದ ಎಲ್ಲಾ ಹಣಕಾಸು ಸಂಸ್ಥೆಗಳು ಅರ್ಥ ಮಾಡಿಕೊಂಡು ಜನರಿಗೆ ಸ್ಪಂದಿಸಬೇಕೆಂದು ಜಿಲ್ಲಾಧಿಕಾರಿ ಅವರು ನುಡಿದರು.
ಸ್ವ ಇಚ್ಛೆಯಿಂದ ಸಾಲ ಮರು ಪಾವತಿ ಮಾಡುವಂತಹ ಜನರಿಂದ ಪಾವತಿ ಮಾಡಿಕೊಳ್ಳಲು ಯಾವುದೇ ಅಭ್ಯಂತರರುವುದಿಲ್ಲ. ಇದನ್ನು ಹೊರತುಪಡಿಸಿ ಒತ್ತಾಯದಿಂದ ಮರುಪಾವತಿಗೆ ಒತ್ತಡ ಹೇರಿದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ನಬಾರ್ಡ್ನ ಸಹಾಯಕ ಪ್ರಬಂಧಕರಾದ ಮುಂಡಂಡ ಸಿ.ನಾಣಯ್ಯ ಅವರು ಮಾತನಾಡಿ ಪ್ರಕೃತಿ ಕೋಪದಿಂದಾಗಿ ಜಿಲ್ಲೆಯ ಎಲ್ಲಾ ಜನರು ಒಂದಲ್ಲ ಒಂದು ರೀತಿಯಲ್ಲಿ ತೊಂದರೆಗೆ ಸಿಲುಕಿದ್ದಾರೆ. ಆದ್ದರಿಂದ ಯಾರಿಂದಲೂ ಸಾಲ ಮರು ಪಾವತಿಗೆ ಒತ್ತಾಯಿಸಬಾರದು ಎಂದು ಅವರು ಕೋರಿದರು.
ಜಿಲ್ಲೆಯಲ್ಲಿ ಕಳೆದ ತಿಂಗಳು ಸುರಿದ ಧಾರಾಕಾರ ಮಹಾ ಮಳೆಗೆ ಒಂದು ಕಡೆ ಭೂ ಕುಸಿತ, ಮತ್ತೂಂದು ಕಡೆ ಪ್ರವಾಹ, ಮಗದೊಂದು ಕಡೆ ಬೆಳೆ ಹಾನಿ, ಹೀಗೆ ಎಲ್ಲರಿಂದಲೂ ಜಿಲ್ಲೆಯ ಕೃಕರಿಗೆ ತೊಂದರೆಯಾಗಿದೆ. ಜೊತೆಗೆ ಕಾರ್ಮಿಕರಿಗೂ ಉದ್ಯೋಗ ಇಲ್ಲದಂತಾಗಿದೆ ಎಂದು ಮುಂಡಂಡ ಸಿ.ನಾಣಯ್ಯ ಅವರು ನುಡಿದರು.
ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ುಶ್ರ, ಚಾರುಲತ ಸೋಮಲ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್, ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಗುಪ್ತಾಜಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಡಿ.ಭಾಸ್ಕರಾಚಾರ್, ಖಾಸಗಿ ಬ್ಯಾಂಕ್ಗಳ ವ್ಯವಸ್ಥಾಪಕರು ಇತರರು ಹಾಜರಿದ್ದರು.