ವಾಟ್ಸ್ಆ್ಯಪ್ ಗ್ರೂಪ್ ರಚನೆಗೆ ನಿರ್ದೇಶ
Team Udayavani, Jan 19, 2019, 12:30 AM IST
ಮಂಗಳೂರು: ಮಲೆನಾಡಿನಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿರುವ ಹಿನ್ನೆಲೆ ಯಲ್ಲಿ ದ.ಕ. ಜಿಲ್ಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ನಿರಂತರವಾಗಿ ಮಾಹಿತಿ ವಿನಿಮಯಕ್ಕಾಗಿ ಪ್ರತ್ಯೇಕ ವಾಟ್ಸ್ ಆ್ಯಪ್ ಗ್ರೂಪ್ ಒಂದನ್ನು ರಚಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮುನ್ನೆಚ್ಚರಿಕೆ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗಾಗಿ ದ.ಕ. ಜಿ.ಪಂ. ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅವರು ಶುಕ್ರವಾರ ಮಾತನಾಡಿದರು. ಶಿವಮೊಗ್ಗದಲ್ಲಿ ಹೆಚ್ಚಿರುವ ಹಿನ್ನೆಲೆಯಲ್ಲಿ ಜಾಗರೂಕತೆ ಅಗತ್ಯವಾಗಿದೆ. ಪ್ರತ್ಯೇಕ ವಾಟ್ಸ್ಆ್ಯಪ್ ಗ್ರೂಪ್ ರಚಿಸಿ ಜಿಲ್ಲೆ ಯಲ್ಲಿ ಮಂಗಗಳ ಸಾವು ಕಂಡುಬಂದರೆ ಅದಕ್ಕೆ ತೆಗೆದು ಕೊಂಡ ಕ್ರಮಗಳೇನು ಅಥವಾ ಇನ್ನಿತರ ವಿಚಾರಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು ಎಂದರು.
ಕಾರ್ಕಳ: ಮುಂಜಾಗ್ರತೆಗೆ ಹಲವು ಕ್ರಮ
ಕಾರ್ಕಳ: ತಾಲೂಕಿನಾದ್ಯಂತ ಮಂಗಗಳ ಸಾವಿನ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಗುರುವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ ಜರುಗಿತು.
ಸಭೆಯಲ್ಲಿ ಹಲವು ಮುಂಜಾಗ್ರತೆ ಕ್ರಮವಾಗಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
65 ಮಂದಿ ಆಸ್ಪತ್ರೆಯಿಂದ ಬಿಡುಗಡೆ
ಉಡುಪಿ: ಶಂಕಿತ ಮಂಗನ ಕಾಯಿಲೆ ರೋಗಕ್ಕೆ ಚಿಕಿತ್ಸೆ ಪಡೆಯಲು ಇದುವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ ಒಟ್ಟು 98 ಮಂದಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು ಈ ಪೈಕಿ 65 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. 33 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಪ್ರಕಟನೆ ತಿಳಿಸಿದೆ.