ಕಮಲದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Jan 18, 2019, 7:03 AM IST
ಮೈಸೂರು: ಆಪರೇಷನ್ ಕಮಲದ ಮೂಲಕ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಯತ್ನಿಸಿರುವ ಬಿಜೆಪಿ ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದೆ ಎಂದು ಆಪಾದಿಸಿ ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಗಾಂಧಿಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಜನತೆ ಬಿಜೆಪಿಗೆ ಪೂರ್ಣ ಬಹುಮತ ನೀಡದ ಕಾರಣ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸಿದೆ. ಇದನ್ನು ಸಹಿಸದ ಬಿಜೆಪಿ ಮುಖಂಡರು ರಾಜ್ಯದಲ್ಲಿ ಕುದುರೆ ವ್ಯಾಪಾರ ಮಾಡಿ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು.
ಪ್ರಧಾನಿ ನರೇಂದ್ರ ಮೋದಿ ಕುಮ್ಮಕ್ಕಿನಿಂದ ರಾಜ್ಯ ಬಿಜೆಪಿ ಮುಖಂಡರು ಒಂದು ಪಕ್ಷದ ಚಿಹ್ನೆಯಡಿ ಆಯ್ಕೆಯಾದ ಶಾಸಕರಿಗೆ ಒತ್ತಡ ಹೇರಿ ಪûಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದ ಆಡಳಿತ ಯಂತ್ರದ ಮೇಲೆ ದುಷ್ಪರಿಣಾಮ ಉಂಟಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಶಾಸಕರ ಕುದುರೆ ವ್ಯಾಪಾರದಿಂದ ಮತದಾರರು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ.
ಸಂವಿಧಾನಾತ್ಮಕವಾಗಿ ರಚಿಸಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದು ಅವರಿಗೆ ಶೋಭೆ ತರುವುದಿಲ್ಲ. ಆಪರೇಷನ್ ಕಮಲ ಕೈಬಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕರಿಸುವಂತೆ ಒತ್ತಾಯಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಮೇಯರ್ ಪುಷ್ಪಲತಾ ಜಗನ್ನಾಥ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.