ನಾಯಿಯಾದರೂ ಸತ್ತಿದೆಯೇ?: ಖರ್ಗೆ
Team Udayavani, Oct 6, 2018, 8:16 AM IST
ಹೊಸದಿಲ್ಲಿ: ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ನ ಮನೆಯ ಒಂದು ನಾಯಿ ಕೂಡ ಸತ್ತಿಲ್ಲ ಎಂದು ಪುನರುಚ್ಚರಿಸುವ ಮೂಲಕ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದ ಸೃಷ್ಟಿಸಿದ್ದಾರೆ. ಮಹಾರಾಷ್ಟ್ರದ ಜಲಗಾಂವ್ನಲ್ಲಿ ಪಕ್ಷದ ಜನಸಂಘರ್ಷ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಖರ್ಗೆ, ನಾವು(ಕಾಂಗ್ರೆಸ್) ದೇಶಕ್ಕಾಗಿ ಬದುಕನ್ನೇ ಅರ್ಪಿಸಿದ್ದೇವೆ. ದೇಶದ ಏಕತೆಗಾಗಿ ಇಂದಿರಾಗಾಂಧಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ್ದಾರೆ. ರಾಜೀವ್ ಗಾಂಧಿ ಕೂಡ ದೇಶಕ್ಕಾಗಿ ಪ್ರಾಣ ಬಲಿನೀಡಿದ್ದಾರೆ. ಈಗ ಹೇಳಿ, ದೇಶದ ಸ್ವಾತಂತ್ರ್ಯಕ್ಕಾಗಿ ಆರೆಸ್ಸೆಸ್ ಅಥವಾ ಬಿಜೆಪಿಯ ಮನೆಯ ಒಂದು ನಾಯಿ ಯಾದರೂ ಸತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಕಳೆದ ವರ್ಷವೂ ಖರ್ಗೆ ಇದೇ ಮಾತುಗಳನ್ನಾಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಅನೇಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಭಗತ್ ಸಿಂಗ್, ಚಂದ್ರಶೇಖರ್ ಆಜಾದ್ರಂಥ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಕಾಂಗ್ರೆಸ್ ಯಾವತ್ತೂ ಮಾತನಾಡುವುದಿಲ್ಲ. ಒಂದು ಕುಟುಂಬ ಮಾತ್ರವೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿತು ಎಂದು ಅವರು ನಂಬಿದ್ದಾರೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದರು.