ಎನ್ಆರ್ಸಿಯಿಂದ ನೈಜ ನಾಗರಿಕ ಹೊರಗುಳಿಯಲಾರ
Team Udayavani, Jan 5, 2019, 12:30 AM IST
ಸಿಲ್ಚಾರ್/ಇಂಫಾಲ: ಅಸ್ಸಾಂನ ಮೂಲ ನಿವಾಸಿಗಳು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್ಆರ್ಸಿ)ಯಿಂದ ಹೊರಗೆ ಉಳಿಯಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅದಕ್ಕೆ ಸಂಬಂಧಿಸಿ ಸಂಸತ್ನಲ್ಲಿ ಅನುಮೋದನೆಗೆ ಬಾಕಿ ಇರುವ ಪೌರತ್ವ ವಿಧೇಯಕಕಕ್ಕೆ ಶೀಘ್ರವೇ ಅನುಮೋದನೆ ಸಿಗುವ ಸಾಧ್ಯತೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯೊಳಗಾಗಿ 100 ರ್ಯಾಲಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಅಸ್ಸಾಂನ ಕಳಿಂಗನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರಕ್ಕೆ ಸಮಸ್ಯೆಯ ಅರಿವು ಇದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂಸತ್ನಲ್ಲಿ ಅನುಮೋದನೆಗೆ ಬಾಕಿ ಇದೆ. ಈ ವಿಚಾರ ಅಸ್ಸಾಂನ ನಾಗರಿಕರ ಭಾವನೆಗಳ ವಿಚಾರವೂ ಆಗಿದೆ ಎಂದಿದ್ದಾರೆ.
ಬಳಿಕ ಮಣಿಪುರ ರಾಜಧಾನಿ ಇಂಫಾಲದಲ್ಲಿ ಮಾತನಾಡಿದ ಪ್ರಧಾನಿ, ಹಿಂದಿನ ಸರಕಾರದ ಅವಧಿಯಲ್ಲಿನ ಕೆಲಸ ನಿರ್ವಹಣೆಯ ಶೈಲಿಯನ್ನು ತರಾಟೆಗೆ ತೆಗೆದುಕೊಂಡರು. ನನೆಗುದಿಗೆ ಬಿದ್ದಿದ್ದ 12 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನಾವು ಅನುಷ್ಠಾನಗೊಳಿಸುತ್ತಿದ್ದೇವೆ ಎಂದಿದ್ದಾರೆ.
ಪ್ರಧಾನ ಮಂತ್ರಿ ಕಚೇರಿಯಲ್ಲಿ “ಪ್ರಗತಿ’ ಎಂಬ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಅದರಲ್ಲಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಹೆಚ್ಚಿನ ನಿಗಾವಹಿಸಲಾಗುತ್ತಿದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ 8 ಯೋಜನೆಗಳನ್ನು ಉದ್ಘಾಟಿಸಿ, ನಾಲ್ಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.