ಟಾರ್ಗೆಟ್ ಬಿಜೆಪಿ…ಲೋಕಸಮರ ಅಖಾಡದಿಂದ ಹಿಂದೆ ಸರಿದ ಮಾಯಾವತಿ!
Team Udayavani, Mar 20, 2019, 9:19 AM IST
ಲಕ್ನೋ:ಬಹುಜನ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬುಧವಾರ ಘೋಷಿಸಿದ್ದಾರೆ. ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ತಾನು ಸ್ಪರ್ಧಿಸಲ್ಲ, ಬಿಎಸ್ಪಿ ಹಾಗೂ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.
ನಾನು ಚುನಾವಣಾ ಅಖಾಡದಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ನಿರ್ಧಾರವನ್ನು ನನ್ನ ಪಕ್ಷ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ಮೈತ್ರಿಕೂಟ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ ಎಂಬ ನಂಬಿಕೆ ಇದೆ. ಸ್ಪರ್ಧೆಯ ನಿರ್ಧಾರದ ಬಗ್ಗೆ ನಂತರ ತೀರ್ಮಾನ ಕೈಗೊಳ್ಳುವುದಾಗಿ ಮಾಯಾವತಿ ಸುದ್ದಿಗಾರರ ಜೊತೆ ಮಾತನಾಡುತ್ತ ವಿವರಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಮಾಯಾವತಿ ನೇತೃತ್ವದ ಬಹುಜನ್ ಸಮಾಜ್ ಪಕ್ಷ ತನ್ನ ಕಡುವೈರಿಯಾದ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಜೊತೆ ಕೈಜೋಡಿಸುವ ಮೂಲಕ ಈ ಬಾರಿ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲು ಸಜ್ಜಾಗಿದೆ.
1994ರಲ್ಲಿ ಮೊದಲ ಬಾರಿಗೆ ಸಂಸತ್ ಗೆ ಆಯ್ಕೆಯಾಗಿದ್ದ ಮಾಯಾವತಿ ನಾಲ್ಕು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಮೈತ್ರಿ ಮೂಲಕ ಅತೀ ಹೆಚ್ಚು ಸ್ಥಾನ ಗೆಲ್ಲುವ ಗುರಿಯೊಂದಿಗೆ ಮಹಾಘಟಬಂಧನ್ ಅನ್ನು ಬಲಪಡಿಸಲು ಮಾಯಾವತಿ ಮತ್ತು ಅಖಿಲೇಶ್ ಯಾದವ್ ನಿರ್ಧರಿಸಿದ್ದಾರೆ.