ಶಿಕ್ಷಣ ಸಚಿವರನ್ನು ಭೇಟಿ ಮಾಡಿದ ನಿಯೋಗ
Team Udayavani, Sep 20, 2018, 12:19 PM IST
ಬಂಟ್ವಾಳ: ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಬಂಟ್ವಾಳ ತಾ|ನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ನೇತೃತ್ವದ ಶಿಕ್ಷಣಾಭಿಮಾನಿಗಳ ನಿಯೋಗ ಸೆ. 18ರಂದು ಶಿಕ್ಷಣ ಸಚಿವ ಎನ್. ಮಹೇಶ್ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದೆ.
ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತುಕತೆ ನಡೆಸಲು ಸ್ವತಃ ಶಿಕ್ಷಣ ಸಚಿವರು ಪ್ರಕಾಶ್ ಅಂಚನ್ ಅವರಿಗೆ ಆಹ್ವಾನ ನೀಡಿದ್ದು, ಅದರಂತೆ ಸೆ. 18ರಂದು ಶಿಕ್ಷಣಾಭಿಮಾನಿಗಳ ನಿಯೋಗ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಸ್ಥಾಪನೆಗೆ ಅನುಮತಿ ನೀಡಬೇಕು. ಕಳೆದ ಬಜೆಟ್ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದಂತೆ 1,000 ಸರಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಆಂಗ್ಲ ಮಾಧ್ಯಮದಲ್ಲಿ ಕಲಿಕೆಯನ್ನು ಶೀಘ್ರ ಆರಂಭಿಸಬೇಕು ಎನ್ನುವ ಬೇಡಿಕೆಯನ್ನು ಮುಂದಿಡಲಾಯಿತು. ಬೇಡಿಕೆಗೆ ಸ್ಪಂದಿಸಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗುವುದು. ಸಿಎಂ ಉಪಸ್ಥಿತಿಯಲ್ಲಿ ಮತ್ತೂಂದು ಸುತ್ತಿನ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಶಿಕ್ಷಣ ಇಲಾಖೆಯ ಆಯುಕ್ತ ಟಿ.ಸಿ. ಜಾಫರ್ ಉಪಸ್ಥಿತರಿದ್ದರು. ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಸದಸ್ಯರಾದ ರಾಮಚಂದ್ರ ಪೂಜಾರಿ ಕರೆಂಕಿ, ಪುರುಷೋತ್ತಮ ಅಂಚನ್, ದೀಪಕ್ ಸಾಲ್ಯಾನ್, ಶಿಕ್ಷಣಾಭಿಮಾನಿಗಳಾದ ರಮೇಶ್ ಬೆಟ್ಟಯ್ಯ, ಅಶೋಕ್ ಎ., ವಿಶಾಲ್ ಪ್ರಕಾಶ್ ನಿಯೋಗದಲ್ಲಿದ್ದರು.