ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ
Team Udayavani, Apr 21, 2017, 3:45 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸಂಜೆ ದೆಹಲಿಗೆ ತೆರಳಲಿದ್ದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನೀತಿ ಆಯೋಗದ ಸಭೆ ನಂತರ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಬಾಕಿ ಉಳಿದಿರುವ ಮೂರು ವಿಧಾನ ಪರಿಷತ್ ನಾಮ ನಿರ್ದೇಶನ ಸ್ಥಾನಗಳ ಭರ್ತಿ ಕುರಿತು ಸಮಾಲೋಚನೆ ಮಾಡುವ ಸಾಧ್ಯತೆಯಿದೆ.
ಕೆಪಿಸಿಸಿ ಅಧ್ಯಕ್ಷರ ಹುದ್ದೆಯನ್ನು ಮಾಜಿ ಸಚಿವ ಎಸ್. ಆರ್. ಪಾಟೀಲರಿಗೆ ಕೊಡಿಸಲು ಪ್ರಯತ್ನ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರದ ಭೇಟಿಯಲ್ಲಿ ಅವರ ಹೆಸರನ್ನು ಮತ್ತೂಮ್ಮೆ ಹೈಕಮಾಂಡ್ ಮುಂದೆ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕ ಗೊಂದಲ ಬಹಳ ದಿನ ಮುಂದುವರಿಯಲು ಬಿಡುವುದು ಬೇಡ. ಆದಷ್ಟು ಬೇಗ ಘೋಷಣೆ ಮಾಡಿದರೆ ಪಕ್ಷದ ಸಂಘಟನೆಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡುವ ಸಾಧ್ಯತೆಯಿದೆ. ಕಾಂಗ್ರೆಸ್ ಉನ್ನತ ಮೂಲಗಳ ಪ್ರಕಾರ ಒಂದು ವಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಗೊಂದಗಳಿಗೆ ತೆರೆ ಬೀಳಲಿದೆ ಎನ್ನಲಾಗಿದೆ.