ಅಗಸ್ಟ್ ಒಳಗೆ BJP ಅಭ್ಯರ್ಥಿಗಳ ಪಟ್ಟಿ ರೆಡಿ: ಆಯ್ಕೆ ಹೇಗೆ ಗೊತ್ತಾ?
Team Udayavani, May 19, 2017, 11:45 AM IST
ಚಿತ್ರದುರ್ಗ : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದ್ದು , ಅಗಸ್ಟ್ ತಿಂಗಳ ಒಳಗೆ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸುವ ಸುಳಿವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳನ್ನು ಅಮಿತ್ ಶಾ ಇಲ್ಲ ಯಡಿಯೂರಪ್ಪ ಮನೆಯಲ್ಲಿ ಆಯ್ಕೆ ಮಾಡುವುದಿಲ್ಲ. ಜನರ ಅಭಿಪ್ರಾಯದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿ ತಿಳಿಸಿದರು.
ಅಗಸ್ಟ್ 3 ರಿಂದ 3 ದಿನಗಳ ಕಾಲ ಅಮಿತ್ ಶಾ ಅವರು ರಾಜ್ಯ ಪ್ರವಾಸ ಮಾಡಲಿದ್ದು, ಈ ವೇಳೆ ಅಭ್ಯರ್ಥಿಗಳ ಪಟ್ಟಿ ಅವರಿಗೆ ನೀಡುವುದಾಗಿ ತಿಳಿಸಿದ್ದಾರೆ.
ಪಕ್ಷಕ್ಕೂ ದಾಳಿಗೂ ಸಂಬಂಧ ಇಲ್ಲ
ಇದೇ ವೇಳೆ ಸಂಸದ, ಮಾಜಿ ಸಚಿವ ಜಿ.ಎಂ ಸಿದ್ಧೇಶ್ವರ್ ನಿವಾಸದ ಮೇಲೆ ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ ಐಟಿ ದಾಳಿ ನಡೆದಿರುವುದು ಕೇಂದ್ರ ಸರ್ಕಾರ ನಿಷ್ಪಕ್ಷಪಾತವಾಗಿದೆ ಎನ್ನುವುದನ್ನು ತೋರಿಸಿದೆ. ಅವರ ವ್ಯವಹಾರಕ್ಕೆ ಸಂಬಂಧಿಸಿ ದಾಳಿ ನಡೆದಿದೆ .ಪಕ್ಷಕ್ಕೂ ದಾಳಿಗೂ ಸಂಬಂಧ ಇಲ್ಲ ಎಂದರು.
ಲಕ್ನೋದಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಯುವ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ನಿಗೂಢ ಸಾವಿನ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಈಗಾಗಲೇ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಪರ್ಕ ಅಭಿಯಾನ ಆರಂಭಿಸಿದ್ದು, ಇದೇ ವೇಳೆ ಅಭ್ಯರ್ಥಿಗಳ ತಲಾಶ್ ನಡೆಯುತ್ತಿದೆ ಎಂದು ವರದಿಯಾಗಿದೆ.