ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ;ಗಂಭೀರ
Team Udayavani, Mar 7, 2018, 2:13 PM IST
ಬೆಂಗಳೂರು: ಬೆಚ್ಚಿ ಬೀಳಿಸುವ ಘಟನೆಯೊಂದರಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ಬುಧವಾರ ನಡೆದಿದೆ.
ಲೋಕಾಯುಕ್ತ ಕಚೇರಿಯಲ್ಲೇ ಘಟನೆ ನಡೆದಿದ್ದು,ವಿಚಾರಣೆಗೆ ಬಂದಿದ್ದ ತುಮಕೂರು ಮೂಲದ
ತೇಜ್ರಾಜ್ ಶರ್ಮಾ ಎಂಬ ಯುವಕ ಕೃತ್ಯ ಎಸಗಿದ್ದಾನೆ. ವಿಶ್ವನಾಥ್ ಶೆಟ್ಟಿ ಅವರ ಸ್ಥಿತಿ ಗಂಭೀರವಾಗಿದ್ದು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದಾರೆ.
ಆಸ್ಪತ್ರೆಯಲ್ಲಿರುವ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ವಿವಿಧ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.ದೇಹಸ್ಥಿತಿ ಗಂಭೀರವಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಆಸ್ಪತ್ರೆಗೆ ಸಿಎಂ ದೌಡು
ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಕಾರ್ಯಕ್ರಮಗಳನ್ನು ಬದಿಗೊತ್ತಿ ಮಲ್ಯ ಆಸ್ಪತ್ರೆಗೆ ದೌಡಾಯಿಸಿ ಪೊಲೀಸ್ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರ ಬಳಿ ತುರ್ತು ಸಭೆ ನಡೆಸುತ್ತಿದ್ದಾರೆ. ಆಸ್ಪತ್ರೆಯ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ವಿಚಾರ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಆರೋಪಿ ತೇಜಸ್ ಶರ್ಮಾನನ್ನು ವಶಕ್ಕೆ ಪಡೆದು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಲೋಕಾಯುಕ್ತರಿಗೆ ಶರ್ಮಾ 3 ಬಾರಿ ಇರಿದಿದ್ದು, ಇರಿತದ ತೀವ್ರತೆಗೆ ಚಾಕು ಮುರಿದು ಹೋಗಿದೆ ಎನ್ನಲಾಗಿದೆ.
ಮುಚ್ಚಿ ಹೋದ ಪ್ರಕರಣವೊಂದರ ಮಾಹಿತಿ ಕಲೆ ಹಾಕಲು ತೇಜ್ರಾಜ್ ಕಚೇರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.