ರಾಜ್ಯದಲ್ಲಿ ಅನಿಯಮಿತ ಲೋಡ್ಶೆಡ್ಡಿಂಗ್ : ಸಚಿವ ಜಾವಡೇಕರ್
Team Udayavani, Mar 18, 2018, 6:40 AM IST
ಬೆಂಗಳೂರು :ಕೇಂದ್ರ ಸರ್ಕಾರ ಬೇಡಿಕೆಯಷ್ಟು ವಿದ್ಯುತ್ ಪೂರೈಕೆ ಮಾಡಲು ಸಿದ್ಧವಿದ್ದರೂ ರಾಜ್ಯ ಸರ್ಕಾರ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳದೇ ಇರುವುದರಿಂದ ರಾಜ್ಯದಲ್ಲಿ ಸುರಿದ ಮಳೆಗೆ ಅನಿಯಮಿತ ಲೋಡ್ಶೆಡ್ಡಿಂಗ್ ಆರಂಭವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದರು.
ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಷ್ಟು ವಿದ್ಯುತ್ ಬೇಕಾದರೂ ಪೂರೈಕೆ ಮಾಡಲು ತಯಾರಿದೆ. ಆದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ದೂರಿದರು.
ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡುತ್ತಿದೆ ಮತ್ತು ರಾಜ್ಯ ಸರ್ಕಾರ ಕೇಳಿದಷ್ಟು ವಿದ್ಯುತ್ ನೀಡುತ್ತಿದ್ದರೂ, ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಇದರಿಂದ ಅನಿಯಮಿತ ಲೋಡ್ಶೆಡ್ಡಿಂಗ್ ಉಂಟಾಗಿದ್ದು, ಜನರು ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಭಾಗದಲ್ಲಿ ಲೋಡ್ ಶೆಡ್ಡಿಂಗ್ ಇದೆ. ಬೆಂಗಳೂರಿನಲ್ಲಿ ಎರಡು ಗಂಟೆ ಮಳೆ ಬಂದರೆ ಜನ ಜೀವನ ಅಸ್ತವ್ಯಸ್ಥವಾಗುತ್ತದೆ. ತಕ್ಷಣವೇ ವಿದ್ಯುತ್ ಸಂಪರ್ಕವೂ ಕಡಿತವಾಗುತ್ತದೆ. ರಾಜ್ಯ ಸರ್ಕಾರ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಣೆ ಮಾಡದೆ ಇರುವುದರಿಂದ ಹೀಗಾಗುತ್ತಿದೆ ಎಂದು ಆರೋಪಿಸಿದರು.