ನಾನು ಬಿಜೆಪಿ ಟಿಕೆಟ್ಆಕಾಂಕ್ಷಿ ಅಲ್ಲ: ಸಂಕೇಶ್ವರ
Team Udayavani, Mar 22, 2018, 6:20 AM IST
ಗದಗ: “ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಬಗ್ಗೆ ಹೈಕಮಾಂಡ್ ನನ್ನೊಂದಿಗೆ ಚರ್ಚೆ ನಡೆಸಿಲ್ಲ. ನಾನು ಆಕಾಂಕ್ಷಿಯೂ ಅಲ್ಲ’ ಎಂದು ಉದ್ಯಮಿ ಹಾಗೂ ಬಿಜೆಪಿ ಮುಖಂಡ ವಿಜಯ ಸಂಕೇಶ್ವರ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕರಿಗೆ ಆದ್ಯತೆ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ಧರಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯುವ ಯುವಕರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಹೀಗಾಗಿ ಯಾರಿಗೇ ಟಿಕೆಟ್ ಕೊಟ್ಟರೂ ನಾನು ಚುನಾವಣಾ ಪ್ರಚಾರ ಮಾಡುತ್ತೇನೆ. ಅಷ್ಟಕ್ಕೂ ಪಕ್ಷದ ವರಿಷ್ಠರು ಈ ಕುರಿತು ನಿರ್ಣಯಿಸಿದರೆ, ನೋಡೋಣ ಎಂದರು.