ಚುನಾವಣಾ ಪೂರ್ವ ಸಮೀಕ್ಷೆಗಳ ಬಗ್ಗೆ ಆತಂಕ ಬೇಡ
Team Udayavani, Apr 26, 2018, 6:30 AM IST
ಮೈಸೂರು: ಚುನಾವಣಾ ಪೂರ್ವ ಸಮೀಕ್ಷೆಗಳಿಗೆ ಆತಂಕಗೊಳ್ಳದೇ ಜೆಡಿಎಸ್ ಹಾಗೂ ಬಿಎಸ್ಪಿ ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ತರಲು ಶ್ರಮಿಸುವಂತೆ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಮನವಿ ಮಾಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಜೆಡಿಎಸ್ ಹಾಗೂ ಬಿಎಸ್ಪಿ ಆಯೋಜಿಸಿದ್ದ ಕುಮಾರಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಮತದಾರರ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಹಲವು ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಬಿಡುಗಡೆ ಮಾಡಲಾಗುತ್ತಿದೆ.ಇವುಗಳ ಬಗ್ಗೆ ಆತಂಕಗೊಳ್ಳದೆ ಉಭಯ ಪಕ್ಷಗಳ ಕಾರ್ಯಕರ್ತರು ಗೆಲುವಿಗೆ ಶ್ರಮಿಸಬೇಕಿದೆ ಎಂದರು.
ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ತಮ್ಮ ಜಾತಿವಾದಿ ಮನಸ್ಸಿನಿಂದ ದಲಿತರು, ಆದಿವಾಸಿಗಳು ಸೇರಿದಂತೆ ಸಮಾಜದ ಅಲ್ಪ ಸಂಖ್ಯಾತ, ಹಿಂದುಳಿದ ವರ್ಗಗಳನ್ನು ಶೋಷಣೆ ಮಾಡುತ್ತಿವೆ. ದೇಶದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಈ ಸಮುದಾಯಗಳ ಅಭಿವೃದಿಟಛಿಗೆ ಯಾವುದೇ ರೀತಿ ಶ್ರಮಿಸಲಿಲ್ಲ. ಅದೇ ರೀತಿ ಬಿಜೆಪಿ ಜಾತಿವಾದ ಮತ್ತು ಧರ್ಮ ಬಳಸಿಕೊಂಡು ಗುಜರಾತ್ನಲ್ಲಿ ಅಧಿಕಾರಕ್ಕೇರಿದೆ
ಎಂದು ಟೀಕಿಸಿದರು.
ಕರ್ನಾಟಕದಲ್ಲಿ ಅಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ನೋಡಿಕೊಳ್ಳುವ ಮೂಲಕ ಎರಡೂ ಪಕ್ಷಗಳನ್ನು ಅಧಿಕಾರದಿಂದ ಕಿತ್ತೂಗೆದು,ಜೆಡಿಎಸ್, ಬಿಎಸ್ಪಿ ಪಕ್ಷಕ್ಕೆ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಅವಕಾಶ ಕಲ್ಪಿಸಬೇಕಿದೆ ಎಂದು ಹೇಳಿದರು.
ಮೋದಿ ವಿರುದ್ಧ ಟೀಕೆ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೋಟ್ಬ್ಯಾನ್,ಜಿಎಸ್ಟಿಯಂತಹ ತಪ್ಪು ಆರ್ಥಿಕ ನೀತಿಗಳಿಂದಾಗಿ ದೇಶದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿ, ಒಳ್ಳೆಯ ದಿನಗಳು ಬರಲಿದೆ ಎಂದು ಹೇಳಿದ್ದ ಮೋದಿ ಸರ್ಕಾರದಲ್ಲಿ ಲಲಿತ್ ಮೋದಿ, ವಿಜಯ್ ಮಲ್ಯ,ನೀರವ್ ಮೋದಿ ಕೋಟ್ಯಂತರ ರೂ. ಲೂಟಿ ಮಾಡಿ, ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ.
ಆದರೆ ದೇಶದ ದುಡಿಯುವ ವರ್ಗದ ಜನರು, ಬಡವರ ಆರ್ಥಿಕ ಪರಿಸ್ಥಿತಿ ಮಾತ್ರ ಸುಧಾರಣೆಯಾಗಿಲ್ಲ. ಇದನ್ನು ಗಮನಿಸಿದರೆ ಕೇಂದ್ರದ ಬಿಜೆಪಿ ಸರ್ಕಾರ ಹೇಳಿದಂತೆ ಒಳ್ಳೆಯ ದಿನಗಳನ್ನು ನಾವಿನ್ನೂ ಹುಡುಕುತ್ತಿದ್ದೇವೆ ಎಂದದರು.
ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಬಿಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ಚಂದ್ರ ಮಿಶ್ರಾ, ರಾಜ್ಯ ಉಸ್ತುವಾರಿ ಅಶೋಕ್ಕುಮಾರ್ ಸಿದ್ದಾರ್ಥ್,ರಾಜ್ಯಾಧ್ಯಕ್ಷ ಎನ್.ಮಹೇಶ್, ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಸೇರಿದಂತೆ ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ಹಾಜರಿದ್ದರು.
ಕಾಂಗ್ರೆಸ್-ಬಿಜೆಪಿ ಒಪ್ಪಂದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಕೈತಪ್ಪಲು ಬಿಜೆಪಿ-ಕಾಂಗ್ರೆಸ್ ಒಳ ಒಪ್ಪಂದ ಕಾರಣ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.
ಕುಮಾರ ಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎನ್ನುತ್ತಾರೆ. ಇನ್ನೂ ಜೆಡಿಎಸ್ಗೆ ಪೂರ್ಣ ಬಹುಮತ ಬರಲಿಲ್ಲ ಎಂದರೆ ಜೆಡಿಎಸ್ -ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ದೆಹಲಿಯ ಕಾಂಗ್ರೆಸ್ ನಾಯಕರು ಮಾಯಾವತಿ ಅವರಿಗೆ ಹೇಳುವ ಮೂಲಕ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದರು. ನಮಗೆ ಯಾರೊಂದಿಗೂ ಒಪ್ಪಂದ ಮಾಡುವ ಅಗತ್ಯವಿಲ್ಲ, ಆದರೆ ವರುಣಾದಲ್ಲಿ ಒಳಒಪ್ಪಂದ ಮಾಡಿಕೊಂಡು ವಿಜಯೇಂದ್ರಗೆ ಟಿಕೆಟ್ ತಪ್ಪಿಸಿದವರು ಯಾರು ಎಂದು ಪ್ರಶ್ನಿಸಿದರು.