ಸಿದ್ದರಾಮಯ್ಯ ಸಿಎಂ ಆಗಲ್ಲ: ಜಗ್ಗೇಶ್
Team Udayavani, May 14, 2018, 6:50 AM IST
ರಾಯಚೂರು: ವಿಧಾನಸಭೆ ಚುನಾವಣೆ ಬಳಿಕ ನಟ ಹಾಗೂ ಬೆಂಗಳೂರು ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗ್ಗೇಶ ಭಾನುವಾರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದರು.
ಕುಟುಂಬ ಸಮೇತರಾಗಿ ಆಗಮಿಸಿದ್ದ ಜಗ್ಗೇಶ್ ರಾಯರ ಮೂಲ ಬೃಂದಾವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮಠದ ಅಧಿಕಾರಿ, ಸಿಬ್ಬಂದಿ ಜತೆ ಕೆಲ ಕಾಲ ಸಮಾಲೋಚನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ಜ್ಯೋತಿಷಿಯಂತೆ ವರ್ತಿಸುತ್ತಿದ್ದಾರೆ.
ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿರುವ ಅವರ ಕನಸು ನನಸಾಗುವುದಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಜೆಡಿಎಸ್, ಕಾಂಗ್ರೆಸ್ನವರು ಯಶವಂತಪುರದಲ್ಲಿ ಹಣ ಹಂಚಿರುವುದನ್ನು ಕಣ್ಣಾರೆ ಕಂಡಿದ್ದೇನೆ. ಆದರೂ ಜನರು ಬಿಜೆಪಿಯನ್ನು ಬೆಂಬಲಿಸಿದ್ದು, ಗೆಲುವಿನ ವಿಶ್ವಾಸ ಹೆಚ್ಚಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದಾರೆ. ಅದಕ್ಕೆ ಮತದಾರರ ಬೆಂಬಲ ಅಗತ್ಯವಾಗಿ ಬೇಕು. ಬಿಜೆಪಿ ಬೆಂಬಲಿಸುವ ಮೂಲಕ ಪ್ರಜಾಪ್ರಭುತ್ವದ ಉಳಿಯುವಿಕೆಗೆ ಎಲ್ಲರೂ ಸಹಕರಿಸಬೇಕು ಎಂದರು.