ರೈತರ ಸಾಲಮನ್ನಾ ಬಗ್ಗೆ 2 ದಿನದೊಳಗೆ ಘೋಷಣೆ; ಬಿಎಸ್ ಯಡಿಯೂರಪ್ಪ
Team Udayavani, May 17, 2018, 11:01 AM IST
ಬೆಂಗಳೂರು: ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದೇವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚಿಸಿದ್ದೇನೆ, ನಾಳೆ ಈ ಸಂಬಂಧ ದಾಖಲೆ ಪರಿಶೀಲಿಸಿ 2 ದಿನದೊಳಗೆ ನಿರ್ಧಾರ ಘೋಷಿಸುವುದಾಗಿ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಒಂದೂವರೆ ಗಂಟೆಯಲ್ಲೇ ರೈತರ ಸಾಲಮನ್ನಾ ಮಾಡಿರುವುದಾಗಿ ಖಾಸಗಿ ಮಾಧ್ಯಮಗಳು ವರದಿ ಪ್ರಕಟಿಸಿದ್ದವು.
ಗುರುವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಾನು ರಾಜ್ಯದ ಆರೂವರೆ ಕೋಟಿ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅನೈತಿಕ ಒಪ್ಪಂದ ಮಾಡಿಕೊಳ್ಳುವ ಮೂಲಕ ನಮ್ಮಿಂದ ಅಧಿಕಾರ ಕಸಿಯುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.
ಬಹುಮತ ಸಾಬೀತುಪಡಿಸುತ್ತೇವೆ, ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಕಾದು ನೋಡಿ ನಾವು ಬಹುಮತ ಸಾಬೀತುಪಡಿಸಿಯೇ ಸಿದ್ಧ ಎಂದು ಬಿಎಸ್ ವೈ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.