ಸರ್ಕಾರಿ ಶಾಲೆಗಳ ಜತೆ ಅಂಗನವಾಡಿ ಕೇಂದ್ರ ವಿಲೀನ: ಚಿಂತನೆ
Team Udayavani, Jun 18, 2018, 6:30 AM IST
ಚಾಮರಾಜನಗರ: ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಪ್ರಾಥಮಿಕ ಶಾಲೆಗಳ ಜತೆ ವಿಲೀನ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದ್ದಾರೆ.
ಜಿಲ್ಲೆಯ ಯಳಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಕೇಂದ್ರ ಸರ್ಕಾರದ ಜತೆ
ಸಮಾಲೋಚಿಸಲಾಗುವುದು.ಅಲ್ಲಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅತ್ಯಂತ ಕಡಿಮೆ ಸಂಖ್ಯೆ ಮಕ್ಕಳಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಅತ್ಯಂತ ಕಡಿಮೆ ಮಕ್ಕಳ ಸಂಖ್ಯೆಯುಳ್ಳ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತೇವೆಂದು ನಾನಾಗಲಿ, ನಮ್ಮ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಲಿ ಎಲ್ಲಿಯೂ ಹೇಳಿಲ್ಲ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಹಾಜರಾಗುವಂತೆ ಮತ್ತೆ ಪ್ರೇರೇಪಿಸುವುದೇ ಸರ್ಕಾರದ ಮುಖ್ಯ ಗುರಿಯಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರವು ಕಾರ್ಯೋನ್ಮುಖವಾಗಿದೆ ಎಂದರು.