ದಯಾಮರಣಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ
Team Udayavani, Jul 14, 2018, 6:15 AM IST
ನರಗುಂದ: “ನೀರು ಕೊಡಿಸಿ ಇಲ್ಲ ದಯಾಮರಣಕ್ಕೆ ಅನುಮತಿ ಕೊಡಿ’ ಎಂದು ರಾಷ್ಟ್ರಪತಿಗಳಿಗೆ ಖುದ್ದಾಗಿ ಮನವಿ ಮಾಡಿದರೂ ಯಾವುದೇ ಸ್ಪಂದನೆಯಿಲ್ಲ. ಹೀಗಾಗಿ ಮಧ್ಯೆ ಪ್ರವೇಶಿಸಿ ನ್ಯಾಯ ದೊರಕಿಸಿ ಕೊಡಬೇಕೆಂಬ ಬೇಡಿಕೆಯೊಂದಿಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ತಿಳಿಸಿದ್ದಾರೆ.
ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ–ಒತ್ತಾಯಿಸಿ ನಡೆಯುತ್ತಿರುವ ಸತ್ಯಾಗ್ರಹ ವೇದಿಕೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.24ರಂದು ದೆಹಲಿ ಚಲೋ ಮೂಲಕ 223 ರೈತ ಹೋರಾಟಗಾರರು ನೀರು ಕೊಡಿ ಇಲ್ಲ ದಯಾಮರಣಕ್ಕೆ ಅನುಮತಿ ನೀಡಿ ಎಂಬ ಘೋಷಣೆಯೊಂದಿಗೆ ಏ.30ರಂದು ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದೆವು. ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ರಾಷ್ಟ್ರಪತಿಗಳ ಕಚೇರಿಯಿಂದ ಪತ್ರ ಬಂದಿತು.
ಆದರೆ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಸಾಕಷ್ಟು ಮನವಿ ಮಾಡಿದ್ದರೂ ಸ್ಪಂದನೆ ಬರುತ್ತಿಲ್ಲ. ಮೇ 4ರಂದು ಮತ್ತೆ
ರಾಷ್ಟ್ರಪತಿಗಳಿಗೆ ಪತ್ರ ಬರೆದು ವಿನಂತಿಸಿದರೂ ಪ್ರತಿಕ್ರಿಯೆ ಬರಲಿಲ್ಲ. ಆದ್ದರಿಂದ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿರುವುದಾಗಿ ತಿಳಿಸಿದರು.