ಖಾಸಗಿ ಕೃಷಿ ಕಾಲೇಜುಗಳಿಗೆ ಅವಕಾಶವಿಲ್ಲ!
Team Udayavani, Jul 14, 2018, 6:00 AM IST
ವಿಧಾನಸಭೆ: ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡುವುದನ್ನು ವಿರೋಧಿಸಿ ಸರ್ಕಾರಿ ಕೃಷಿ ಕಾಲೇಜು ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.
ರೈ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಕೃಷಿ ಸಂಬಂಧಿ ಕೋರ್ಸ್ ಆರಂಭಿಸಲು ನೀಡಿದ್ದ ಅವಕಾಶವನ್ನು ಹಿಂಪಡೆಯಲು ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಶುಕ್ರವಾರ ಅನುಮೋದನೆ ನೀಡಿದೆ.
ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಆರೋಗ್ಯ ವಿಜ್ಞಾನಗಳು, ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ, ವ್ಯವಸ್ಥಾಪನೆ ಮತ್ತು ತಂತ್ರಜ್ಞಾನ, ನೈಸರ್ಗಿಕ ವಿಜ್ಞಾನಗಳು, ಮಾನಸಿಕ ಮತ್ತು ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ಕೋರ್ಸ್ ಆರಂಭಿಸಲು ಈ ಹಿಂದೆ ಅನುಮತಿ ನೀಡಲಾಗಿತ್ತು. ಇದೀಗ ತಿದ್ದುಪಡಿ ವಿಧೇಯಕದಲ್ಲಿ ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ ಮತ್ತು ಕೃಷಿ ವಿಜ್ಞಾನಗಳು ಎಂಬ ಪದಗಳನ್ನು ಕೈಬಿಡಲು ನಿರ್ಧರಿಸಲಾಗಿದೆ.
ಹೀಗಾಗಿ ಇನ್ನು ಮುಂದೆ ರೈ ತಾಂತ್ರಿಕ ವಿವಿ ಕೃಷಿ ಮತ್ತು ಭೂ ವಿಜ್ಞಾನಗಳಿಗೆ ಸಂಬಂಧಿಸಿದ ಕೋರ್ಸ್ ನಡೆಸುವಂತಿಲ್ಲ.ಆದರೆ, ರೈ ತಾಂತ್ರಿಕ ವಿವಿ ಕೃಷಿ ಕಾಲೇಜುಗಳನ್ನು ಸ್ಥಾಪಿಸಿ ಆರಂಭಿಸಿರುವ ಕೋರ್ಸ್ಗಳಿಗೆ ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಇದರಿಂದ ಯಾವುದೇ ಸಮಸ್ಯೆಯಿಲ್ಲ. ಅಂತಹ ಸುಮಾರು 2000 ವಿದ್ಯಾರ್ಥಿಗಳ 4 ವರ್ಷದ ಕೋರ್ಸ್ ಪೂರೈಸುವ ಜವಾಬ್ದಾರಿಯನ್ನು ವಿಶ್ವವಿದ್ಯಾಲಯಕ್ಕೆ ನೀಡಲಾಗಿದೆ. ಮತ್ತೆ ಹೊಸದಾಗಿ ಕೃಷಿ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವಂತಿಲ್ಲ.
ನಿಯಮ ಉಲ್ಲಂಘನೆ:
ಉನ್ನತ ಶಿಕ್ಷಣ ಸಚಿವರ ಪರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅವರು ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕ-2018ನ್ನು ಮಂಡಿಸಿದರು. ರೈ ತಾಂತ್ರಿಕ ವಿವಿ ಕೃಷಿಗೆ ಸಂಬಂಧಿಸಿದ ಪದವಿ ಕೋರ್ಸ್ಗಳನ್ನು ಆರಂಭಿಸಿದೆಯಾದರೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ. ಸರ್ಕಾರಿ ಕೃಷಿ ಕಾಲೇಜುಗಳಿಗೆ ನಿಗದಿಪಡಿಸಿರುವ ಮಾನದಂಡ ಅನುಸರಿಸುತ್ತಿಲ್ಲ. ಈ ಕಾರಣಕ್ಕಾಗಿ ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ ಹಾಗೂ ಭೂ ವಿಜ್ಞಾನಗಳಿಗೆ ಸಂಬಂಧಿಸಿದ ಕೋರ್ಸ್ಗಳನ್ನು ನಡೆಸಲು 2012ರ ಕಾಯ್ದೆಯಲ್ಲಿ ನೀಡಿದ್ದ ಅವಕಾಶ ಹಿಂಪಡೆಯಲು ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
ವಿಧೇಯಕವನ್ನು ಸ್ವಾಗತಿಸಿದ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ, ಸುರೇಶ್ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ ಲಿಂಬಾವಳಿ, ಪಿ.ರಾಜೀವ್, ಖಾಸಗಿ ವಿವಿಯಲ್ಲಿ ಕೃಷಿ ಕೋರ್ಸ್ಗೆ ಈಗಾಗಲೇ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಆ ವಿವಿಯಲ್ಲೇ ಪದವಿ ಪೂರೈಸುವ ಬದಲು ಅವರನ್ನು ಸರ್ಕಾರಿ ಕೃಷಿ ಕಾಲೇಜುಗಳಿಗೆ ಸೇರಿಸಬೇಕೆಂದು ಆಗ್ರಹಿಸಿದರು. ಆದರೆ, 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸರ್ಕಾರಿ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲು ಸಾಧ್ಯವಿಲ್ಲದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಬಳಿಕ ಸಭಾಧ್ಯಕ್ಷರ ಪೀಠದಲ್ಲಿದ್ದ ಉಪಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ವಿಧೇಯಕವನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ರೈ ವಿವಿ ನೌಕರರು ಚೆಕ್ಕರ್
ರಾಜ್ಯ ಸರ್ಕಾರದ ಮೇಲುಸ್ತುವಾರಿ ಸಮಿತಿಯು ರೈ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆಗೆಂದು ಹೋದಾಗ ಸಿಬ್ಬಂದಿ ಸಾಮೂಹಿಕವಾಗಿ ಗೈರು ಹಾಜರಾಗಿ ಪರಿಶೀಲನೆಗೆ ಅಸಹಕಾರ ತೋರಿದ್ದರು ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದರು. ವಿವಿಯು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿದೆಯೇ? ಐಸಿಎಆರ್ ಮಾನಂದಂಡ ಮತ್ತು ನಿಯಂತ್ರಣದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಮೇಲುಸ್ತುವಾರಿ ಸಮಿತಿ ಸದಸ್ಯರು ಹೋದಾಗ ಎಲ್ಲರೂ ಗೈರು ಹಾಜರಾಗಿ ಮಾಹಿತಿ ಮುಚ್ಚಿಡುವ ಪ್ರಯತ್ನ ಮಾಡಿದರು. ಅಲ್ಲದೆ, ಉದ್ದೇಶಪೂರ್ವಕವಾಗಿ ಅವರು ಈ ರೀತಿ ಮಾಡುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂತು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ