ಮೇಕೆದಾಟು: ಉಭಯ ರಾಜ್ಯಗಳ ಸಭೆಗೆ ಸಮ್ಮತಿ
Team Udayavani, Aug 10, 2018, 6:00 AM IST
ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ಮುಖ್ಯಮಂತ್ರಿಗಳ ಸಭೆ ಆಯೋಜಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಮ್ಮತಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆ ಜಾರಿಗೆ ನೆರವಾಗಬೇಕೆಂದು ಮನವಿ ಮಾಡಿದ್ದೇನೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರು. ನಾವು ಸಭೆ ನಿಗದಿಪಡಿಸಿದರೆ ತಮಿಳುನಾಡಿನವರು ಬರುವುದಿಲ್ಲ.ನೀವೇ ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಆಹ್ವಾನಿಸಿ ಮಾತನಾಡಿ ಎಂದು ಮನವಿ ಮಾಡಿದೆ. ಅದಕ್ಕೆ ಅವರು ಒಪ್ಪಿದ್ದಾರೆ ಎಂದು ತಿಳಿಸಿದರು.
ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಎತ್ತಿನಹೊಳೆ ಯೋಜನೆ ಮತ್ತು ಭದ್ರಾ ಯೋಜನೆಗಳನ್ನು ರಾಷ್ಟ್ರೀಯ ನೀರಾವರಿ ಯೋಜನೆಗಳು ಎಂದು ಘೋಷಿಸುವಂತೆಯೂ ರಾಜ್ಯ ಸಲ್ಲಿಸಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.