ಸಾಲಮನ್ನಾ ಬಗ್ಗೆ ಇನ್ನೂ ಗೊಂದಲವಿದೆ: ಬಿಎಸ್ವೈ
Team Udayavani, Aug 10, 2018, 6:25 AM IST
ಬೀದರ: ಸಾಲ ಮನ್ನಾ ಮಾಡುತ್ತೇವೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇಂದಿಗೂ ರೈತರ ಸಾಲಮನ್ನಾ ಬಗ್ಗೆ ಇರುವ ಗೊಂದಲಗಳನ್ನು ನಿವಾರಣೆ ಮಾಡಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಮೊದಲು ಸಹಕಾರ ಬ್ಯಾಂಕ್ಗಳ ಸಾಲಮನ್ನಾ ಮಾಡುವ ಮೂಲಕ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮನ್ನಾ ಬಗ್ಗೆ ಅವರ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಬೇಕು.
ಉತ್ತರ ಕರ್ನಾಟಕದ 13 ಜಿಲ್ಲೆಗಳು ಬರಗಾಲದಿಂದ ತತ್ತರಿಸುತ್ತಿವೆ. ಆದರೆ, ಸರ್ಕಾರ ಮಾತ್ರ ಇತ್ತ ಗಮನ ಹರಿಸುತ್ತಿಲ್ಲ. ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ. ಇದನ್ನು ನೋಡಿದರೆ ಆಡಳಿತ ವೈಖರಿ ಏನು ಎಂಬುದು ಎಲ್ಲರಿಗೂ ಗೊತ್ತಾಗುವಂತಿದೆ ಎಂದರು.