ವಾಪಸ್ ಬನ್ನಿ ಸರ್ಕಾರಿ ಶಾಲೆಗೆ
Team Udayavani, Sep 6, 2018, 6:00 AM IST
ಬೆಂಗಳೂರು: ಕಳೆದ ಎಂಟು ವರ್ಷದಲ್ಲಿ ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಸೇರಿರುವ 10 ಲಕ್ಷ ವಿದ್ಯಾರ್ಥಿಗಳನ್ನು ಮರಳಿ ಸರ್ಕಾರಿ ಶಾಲೆಗಳಿಗೆ ವಾಪಸ್ ಕರೆ ತರಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಒಂದು ಭಾಷೆಯಾಗಿ ಕಲಿಸಲು ಶೀಘ್ರವೇ 1 ಸಾವಿರ ಇಂಗ್ಲಿಷ್ ಪದವಿ ಶಿಕ್ಷಕರನ್ನು ನೇಮಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆ ಶಿಕ್ಷಕರಿಗೆ ಇಂಗ್ಲಿಷ್ ಭಾಷೆಯ ಮೇಲೆ ಸಂಪೂರ್ಣ ಹಿಡಿತ ಇಲ್ಲದಿರುವುದರಿಂದ ಕೀಳರಿಮೆ ಇರುತ್ತದೆ. ಈ ವರ್ಷ ಪ್ರಾಯೋಗಿಕವಾಗಿ ಸರ್ಕಾರ 1 ಸಾವಿರ ಶಾಲೆಗಳಲ್ಲಿ ಇಂಗ್ಲಿಷ್ ಭಾಷೆಯನ್ನು ಕಡ್ಡಾಯವಾಗಿ ಕಲಿಸಲು ಶೀಘ್ರವೇ ಇಂಗ್ಲಿಷ್ ಪದವಿ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಕಳೆದ ಏಳು ವರ್ಷದಲ್ಲಿ 10 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಿಂದ ಖಾಸಗಿ ಶಾಲೆಗೆ ಸೇರ್ಪಡೆಯಾಗಿರುವ ಸಂಗತಿ ರಾಜ್ಯ ಸರ್ಕಾರವೇ ನಡೆಸಿದ್ದ ಸಮೀಕ್ಷೆಯಲ್ಲಿ ಪತ್ತೆಯಾಗಿತ್ತು. ಈ ಕುರಿತಂತೆ ಆಗಸ್ಟ್ 22 ರಂದು ಉದಯವಾಣಿ ವಿಸ್ತೃತ ವರದಿ ಪ್ರಕಟಿಸಿತ್ತು.
ಪ್ರತಿ ವರ್ಷ ಸರ್ಕಾರಿ ಶಾಲೆಯ ಮಕ್ಕಳು ಖಾಸಗಿ ಶಾಲೆಗೆ ಸೇರ್ಪಡೆಯಾಗುತ್ತಿದ್ದು, ಇದರಿಂದ 1782 ಸರ್ಕಾರಿ ಶಾಲೆಗಳು ಮುಚ್ಚಿ ಅದಕ್ಕೆ ಪ್ರತಿಯಾಗಿ 3186 ಖಾಸಗಿ ಶಾಲೆಗಳು ಹುಟ್ಟಿಕೊಂಡಿವೆ ಎಂಬ ಅಂಶ ಬೆಳಕಿಗೆ ಬಂದಿತ್ತು.
2001 ರಿಂದ 20017 ರ ವರೆಗೆ ಸರ್ಕಾರಿ ಪ್ರಾಥಮಿಕ ಶಾಲೆಗಳ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು ಖಾಸಗಿ ಶಾಲೆಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಇದಕ್ಕೆ ಸರ್ಕಾರ ನಿಯಮ ಮೀರಿ ಶಾಲೆಗಳಿಗೆ ಅನುಮತಿ ನೀಡಿರುವುದೇ ಕಾರಣ ಎಂಬ ಆರೋಪವಿತ್ತು. ಸರ್ಕಾರಿ ಶಾಲೆಗಳಿರುವ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಗೆ ಅನುಮತಿ ನೀಡಬಾರದು ಎಂಬ ನಿಯಮವಿದೆ. ಆದರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಡಿಡಿಪಿಐಗಳು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದರಿಂದ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಇಳಿಮುಖವಾಗುತ್ತ ಬಂದಿದ್ದು, ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವಂತಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಏಳು ವರ್ಷಗಳಲ್ಲಿ ಸರ್ಕಾರಿ ಅನುದಾನಿತ ಶಾಲೆಗಳಲ್ಲಿಯೂ ಸುಮಾರು 1 ಲಕ್ಷ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ.
ಸರ್ಕಾರಿ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದು. ಪಾಲಕರಲ್ಲಿರುವ ಇಂಗ್ಲಿಷ್ ವ್ಯಾಮೋಹ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗಲು ಕಾರಣ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಿ ಶಾಲೆಗಳ ಸಬಲೀಕರಗೊಳಿಸಲು ಈ ವರ್ಷ ಪ್ರಾಯೋಗಿಕವಾಗಿ 1 ಸಾವಿರ ಇಂಗ್ಲಿಷ್ ಪದವಿ ಶಿಕ್ಷಕರ ನೇಮಕ ಮಾಡಿಕೊಂಡು ಸರ್ಕಾರಿ ಶಾಲೆಗಳಲ್ಲಿಯೂ ಇಂಗ್ಲಿಷ್ ಒಂದು ಭಾಷೆಯಾಗಿ ಕಲಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಸರ್ಕಾರಿ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ಭಾಷೆಯ ಬಗ್ಗೆ ಇರುವ ಕೀಳರಿಮೆ ಹೋಗಲಾಡಿಸಲು ತಿಂಗಳಿಗೊಮ್ಮೆ ತರಬೇತಿ ನೀಡುವ ಕುರಿತಂತೆಯೂ ಸರ್ಕಾರ ಚಿಂತನೆ ನಡೆಸಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯಂತೆ ಶಿಕ್ಷಕರಿಗೆ ತರಬೇತಿ:
ದೆಹಲಿ ಸರ್ಕಾರ, ಸರ್ಕಾರಿ ಶಾಲೆಗಳು ಹಾಗೂ ಶಿಕ್ಷಕರ ಗುಣಮಟ್ಟ ಹೆಚ್ಚಿಸಲು ಶಿಕ್ಷಕರಿಗೆ ವಿದೇಶಗಳಲ್ಲಿ ತರಬೇತಿ ಕೊಡಿಸುತ್ತಿದೆ. ರಾಜ್ಯ ಸರ್ಕಾರವೂ ಆ ನಿಟ್ಟಿನಲ್ಲಿ ಆಲೋಚನೆ ಮಾಡುತ್ತಿದೆ. ಖಾಸಗಿ ಶಾಲೆಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟವನ್ನೂ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಹಾಗಂತ ಖಾಸಗಿ ಶಾಲೆಗಳನ್ನು ನಿಯಂತ್ರಣದಲ್ಲಿಡಲು ಸರ್ಕಾರ ಯಾವುದೇ ಕಾನೂನು ರೂಪಿಸುವುದಿಲ್ಲ. ಪ್ರಾಥಮಿಕ ಶಾಲೆಗಳ ದುರಸ್ಥಿ ಹಾಗೂ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಈ ವರ್ಷ 1 ಸಾವಿರ ಕೋಟಿ ರೂ. ಖರ್ಚು ಮಾಡಲು ನಿರ್ಧರಿಸಲಾಗಿದೆ ಎಂದರು.
ಸರ್ಕಾರಿ ಶಾಲಾ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ವರ್ಗಾವಣೆ ವಿಳಂಬದಿಂದ ಶಿಕ್ಷಕರಿಗೆ ತೊಂದರೆಯಾಗಿದೆ. ಆದರೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಈಗ ನೂರು ದಿನ ಪೂರೈಸಿದೆ. ಶಿಕ್ಷಕರು ಎಲ್ಲ ಬೇಡಿಕೆಗಳನ್ನು ತೆಗೆದುಕೊಂಡು ಒಂದೇ ಬಾರಿ ಪರಿಹರಿಸುವಂತೆ ಒತ್ತಡ ಹಾಕಬೇಡಿ. ನನಗೆ ಸ್ಪಲ್ಪ ಸಮಯ ನೀಡಿ ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರ 45 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿದೆ. ಅಲ್ಲದೇ 6ನೇ ವೇತನ ಆಯೋಗ ಶಿಫಾರಸಿನಂತೆ 16 ಸಾವಿರ ಕೋಟಿ ರೂ. ಸರ್ಕಾರಿ ನೌಕರರ ವೇತನ ಹೆಚ್ಚಳವಾಗಿದೆ. ಅದಕ್ಕೂ ಹಣ ಹೊಂದಿಸಬೇಕು. ಆದರೆ, ಸರ್ಕಾರ ಯಾವುದೇ ಹಣಕಾಸಿನ ತೊಂದರೆ ಅನುಭವಿಸುತ್ತಿಲ್ಲ. ಈಗಾಗಲೇ ಶೇಕಡಾ 32 ಹೆಚ್ಚಿನ ತೆರಿಗೆ ಸಂಗ್ರಹಿಸಿ, ದಾಖಲೆ ನಿರ್ಮಿಸಿದೆ. ಘೋಷಿತ ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.
ಅರೆಕಾಲಿಕ ಹಾಗೂ ಅತಿಥಿ ಉಪನ್ಯಾಸಕರ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳುತ್ತದೆ. ಯಾವುದೇ ಕಾರಣಕ್ಕೂ ಶಿಕ್ಷಕರು ತಾಳ್ಮೆ ಕಳೆದುಕೊಳ್ಳಬಾರದು. ನನ್ನ ಜೀವನದಲ್ಲಿ ಶಿಕ್ಷಕರನ್ನು ಅತಿ ಹೆಚ್ಚು ಗೌರವದಿಂದ ಕಾಣುತ್ತೇನೆ. ದೇಶ ಸುಸಂಸ್ಕೃತಿಯಿಂದ ಶಾಂತಿಯ ನಾಡಾಗಿ ಹೊರ ಹೊಮ್ಮಲು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂದು ತಿಳಿಸಿದರು.
ಕೋರಿಕೆ ವರ್ಗಾವಣೆಗೆ ಆದ್ಯತೆ: ಮಹೇಶ್
ಮಾನವೀಯ ದೃಷ್ಟಿಯಿಂದ ಕೋರಿಕೆಯ ವರ್ಗಾವಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಹೀಗಾಗಿ ಶಿಕ್ಷಕರ ವರ್ಗಾವಣೆ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಸಹಕರಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಮನವಿ ಮಾಡಿದರು.
ಶಿಕ್ಷಣ ಕ್ಷೇತ್ರದ ಇತಿಹಾಸದ ಬಗ್ಗೆ ಮಾತನಾಡಿದ ಅವರು, ದೇಶದಲ್ಲಿ ಶಿಕ್ಷಣವನ್ನು ಜ್ಯೋತಿ ಬಾಫುಲೆ ಹಾಗೂ ಮೊದಲ ಶಿಕ್ಷಕಿ ಸಾವಿತ್ರಿ ಬಾಫುಲೆ ಸಾರ್ವತ್ರಿಕರಣಗೊಳಿಸಿದರು. ಕೆಲವೇ ವರ್ಗಕ್ಕೆ ಮೀಸಲಾಗಿದ್ದ ಶಿಕ್ಷಣವನ್ನು ಎಲ್ಲರಿಗೂ ದೊರೆಯುವಂತೆ ಮಾಡಿರುವ ಸಾವಿತ್ರಿ ಬಾಫುಲೆಯವರನ್ನು ಶಿಕ್ಷಕ ವರ್ಗ ನೆನೆಯಬೇಕು ಎಂದು ಹೇಳಿದರು.
ಸರ್ಕಾರಿ ಶಾಲಾ ಶಿಕ್ಷಕರು ಖಾಸಗಿ ಶಾಲಾ ಶಿಕ್ಷಕರಿಗಿಂತ ಹೆಚ್ಚು ಸಮರ್ಥರಿದ್ದಾರೆ. ಖಾಸಗಿ ಶಾಲೆ ಶಿಕ್ಷಕರು ಮಕ್ಕಳಿಗೆ ಗಿಣಿ ಪಾಠ ಹೇಳುತ್ತಾರೆ. ಹೀಗಾಗಿ ಖಾಸಗಿ ಶಾಲೆ ಮಕ್ಕಳು ಗಿಣಿ ಪಾಠ ಒಪ್ಪಿಸುತ್ತಾರೆ. ಸರ್ಕಾರಿ ಶಾಲೆಯ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿರುವುದರಿಂದ ಗುರುಗಳು ಅವರಿಗೆ ಏನು ಕಲಿಸುತ್ತಾರೋ ಮುಂದೆ ಅದನ್ನೇ ಕಲಿಯುತ್ತಾರೆ. ವಿದ್ಯಾರ್ಥಿಗಳು ಪ್ರಯೋಗಾಲಯ ಇದ್ದ ಹಾಗೆ. ಶಿಕ್ಷಕರು ವಿಜ್ಞಾನಿಗಳ ಹಾಗೆ ಒಳ್ಳೆಯದನ್ನು ಸೃಷ್ಟಿಸಬೇಕು. ಈ ವರ್ಷ ಸರ್ಕಾರಿ ಶಾಲೆಗಳಲ್ಲಿ ಶೇಕಡಾ 100 ರಷ್ಟು ಫಲಿತಾಂಶ ಬರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ 20 ಶಿಕ್ಷಕರಿಗೆ, 11 ಪ್ರೌಢ ಶಾಲಾ ಶಿಕ್ಷಕರು, ರಾಜೀವ್ ಗಾಂಧಿ ವಿಜ್ಞಾನ ಶಿಕ್ಷಕ,ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಶಿಕ್ಷಕರಿಗೆ ಪ್ರಶಸ್ತಿ ನೀಡಲಾಯಿತು. ಇದೇ ವೇಳೆ, ಮಹಾತ್ಮಾ ಗಾಂಧಿಜಿ 150 ನೇ ಜನ್ಮ ದಿನದ ಅಂಗವಾಗಿ ಡೆಲ್ ಸಂಸ್ಥೆ ವತಿಯಿಂದ 57 ಸರ್ಕಾರಿ ಶಾಲೆಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ