ಸೆ.10 ರಂದು ಭಾರತ್ ಬಂದ್; ಬಸ್, ಆಟೋ ಸಂಚಾರ ಸ್ಥಗಿತ ಸಾಧ್ಯತೆ?
Team Udayavani, Sep 8, 2018, 6:33 PM IST
ಬೆಂಗಳೂರು:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಸೋಮವಾರ ಕರೆ ನೀಡಿರುವ ಭಾರತ್ ಬಂದ್ ಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ, ಸಿಐಟಿಯು, ಕನ್ನಡಪರ ಸೇರಿದಂತೆ ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು ಸಾರಿಗೆ ಸಂಚಾರ ಸ್ತಬ್ಧವಾಗುವ ಸಾಧ್ಯತೆ ಇದೆ.
ಏತನ್ಮಧ್ಯೆ ಭಾರತ್ ಬಂದ್ ಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ಕನ್ನಡ ಪರ ಸಂಘಟನೆಯ ವಾಟಾಳ್ ನಾಗರಾಜ್, ನಾರಾಯಣ ಗೌಡ ಸೇರಿದಂತೆ ಹಲವು ಮುಖಂಡರು ಬೆಂಬಲ ಸೂಚಿಸಿದ್ದಾರೆ. ಶಾಲಾ, ಕಾಲೇಜುಗಳ ರಜೆಯನ್ನು ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಓಲಾ, ಉಬರ್ ಕಾರು ಚಾಲಕ, ಮಾಲಕರ ಸಂಘ ಬೆಂಬಲ ವ್ಯಕ್ತಪಡಿಸಿದೆ. ಆಟೋ, ಕಾರು ಚಾಲಕ ಮಾಲಕರ ಅಸೋಸಿಯೇಶನ್ ಕೂಡಾ ಬೆಂಬಲ ಸೂಚಿಸಿದೆ. ಚಿಕ್ಕಮಗಳೂರು, ಹುಬ್ಬಳ್ಳಿ ಹಾಗೂ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ.