ಮೀಟರ್ ಬಡ್ಡಿಗೆ ಕಡಿವಾಣ ಹಾಕಿದ್ದೇ ಸಂಕಟಕ್ಕೆ ಕಾರಣ?
Team Udayavani, Sep 15, 2018, 6:00 AM IST
ಬೆಂಗಳೂರು: ರೈತರ ಸಾಲ ಮನ್ನಾ ಮಾಡುವುದರ ಜೊತೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಋಣ ಮುಕ್ತ ಕಾಯ್ದೆ ಜಾರಿಗೆ ತಂದು ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಮುಂದಾಗಿದ್ದು, ಮೀಟರ್ ಬಡ್ಡಿ ದಂಧೆ ಮಾಡುತ್ತಿರುವ ತಂಡ ತಮ್ಮ ವ್ಯವಹಾರಕ್ಕೆ ಕತ್ತರಿ ಬೀಳಬಾರದೆಂದು ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ.
ಆರಂಭದಲ್ಲಿ ಬಿಜೆಪಿ ನಾಯಕರೂ ತಕ್ಷಣವೇ ಆಪರೇಷನ್ ಕಮಲಕ್ಕೆ ಹಿಂದೇಟು ಹಾಕಿದ್ದರು. ಆದರೆ, ಮೀಟರ್ ಬಡ್ಡಿ ವ್ಯವಹಾರ ನಡೆಸುವವರು ಕೆಲವು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಸರ್ಕಾರ ಉರುಳಿಸಲು ಹಣದ ಆಮಿಷ ಒಡ್ಡಿದ್ದರು. ಈ ಬೆಳವಣಿಗೆಗಳ ಬಗ್ಗೆ ಬಿಜೆಪಿ ನಾಯಕರಿಗೆ ದಂಧೆಕೋರರು ಮಾಹಿತಿ ನೀಡುತ್ತಿದ್ದರು ಎಂಬುದು ಸಿಎಂ ಆಪ್ತರ ಅನಿಸಿಕೆಯಾಗಿದೆ.
ಈ ಎಲ್ಲ ಬೆಳವಣಿಗೆಗಳನ್ನು ರಾಜ್ಯ ಗುಪ್ತಚರ ಇಲಾಖೆ ಪತ್ತೆಹಚ್ಚಿ ಸಿಎಂ ಕುಮಾರಸ್ವಾಮಿ ಗಮನಕ್ಕೆ ತಂದಿದ್ದಾರೆ. ಆ ಹಿನ್ನೆಲೆಯಲ್ಲಿ ಮೀಟರ್ ಬಡ್ಡಿ ವ್ಯವಹಾರ ಮಾಡುವವರ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಗುಪ್ತಚರ ಇಲಾಖೆಗೆ ಕುಮಾರಸ್ವಾಮಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.