ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲ್ಲ: ಸಚಿವ ನಾಡಗೌಡ
Team Udayavani, Sep 16, 2018, 6:45 AM IST
ರಾಯಚೂರು: ನಮ್ಮ ಶಾಸಕರನ್ನು ಸೆಳೆಯಲು ಬಿಜೆಪಿಯವರು ನಿರಂತರ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ, ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷಗಳ ಕಾಲ ಸರ್ಕಾರ ಸುಭದ್ರವಾಗಿರಲಿದೆ. ಸಮ್ಮಿಶ್ರ ಸರ್ಕಾರದ ಮಂತ್ರಿಮಂಡಲ ವಿಸ್ತರಣೆ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲರಿಗೂ ಮಂತ್ರಿ ಸ್ಥಾನ ಬಯಕೆ ಇರುವ ಕಾರಣ ಯಾರೂ ಪಕ್ಷ ಬಿಟ್ಟು ಹೋಗುವ ಪ್ರಮೇಯವೇ ಇಲ್ಲ. ಪಕ್ಷಗಳಲ್ಲಿ ಹಸ್ತಕ್ಷೇಪ ನಡೆಯುತ್ತಿರುತ್ತದೆ. ಕಾಂಗ್ರೆಸ್ನಲ್ಲಿ ದೊಡ್ಡ, ದೊಡ್ಡ ನಾಯಕರಿದ್ದಾರೆ. ಜಾರಕಿಹೊಳಿ ಸಹೋದರರು ಪಕ್ಷ ಬಿಡುವುದಾಗಿ ಎಲ್ಲೂ ಹೇಳಿಲ್ಲ. ಸಿದ್ದರಾಮಯ್ಯನವರು ಬಂದ ಮೇಲೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ ಅಷ್ಟೇ. ಸರ್ಕಾರ ಅಭದ್ರವಾಗಿದೆ ಎಂಬುದೆಲ್ಲ ಸುಳ್ಳು ವದಂತಿ ಎಂದರು. ನಮ್ಮ ಸರ್ಕಾರ ಉತ್ತರ ಕರ್ನಾಟಕದ ಪರವಾಗಿದೆ. ಎಂಟರಿಂದ ಒಂಬತ್ತು ಇಲಾಖೆಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರ ಮಾಡುತ್ತಿದ್ದೇವೆ. ರಾಜ್ಯವನ್ನು ಒಡೆಯುವ ಕೆಲಸ ಮಾಡುತ್ತಿಲ್ಲ ಎಂದರು.