ಪರಿಷತ್ ಚುನಾವಣೆಗೆ ಕೈ ಅಭ್ಯರ್ಥಿಗಳ ಆಯ್ಕೆ
Team Udayavani, Sep 24, 2018, 6:40 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ನ ಮೂರು ಸ್ಥಾನಗಳಿಗೆ ಅ.4 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಾಲಿನ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಚಿವ ನಸೀರ್ ಅಹಮದ್ ಹಾಗೂ ಎಂ.ಸಿ.ವೇಣುಗೋಪಾಲ್ ಅವರನ್ನು ಅಧಿಕೃತವಾಗಿ ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ. ನಸೀರ್ ಅಹಮದ್ ಅವರು ಈ ಹಿಂದೆ ಬಿನ್ನಿಪೇಟೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ ಬಂಗಾರಪ್ಪ ಅವರ ಸಂಪುಟದಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿದ್ದರು.
ನಂತರ ಸ್ಥಳೀಯ ಸಂಸ್ಥೆಗಳಿಂದ ಎರಡು ಬಾರಿ ಕೋಲಾರ-ಚಿಕ್ಕಬಳ್ಳಾಪರ ಕ್ಷೇತ್ರದಿಂದ ವಿಧಾನಪರಿಷತ್ಗೆ ಆಯ್ಕೆಯಾಗಿದ್ದರು.ಎಂ.ಸಿ.ವೇಣುಗೋಪಾಲ್ 2013ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿ
ಸೋಲು ಅನುಭವಿಸಿದ್ದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಅವರಿಗೆ ಅಲ್ಲಿ ಟಿಕೆಟ್ ನೀಡಿದ್ದರಿಂದ ಇವರಿಗೆ ಟಿಕೆಟ್ ತಪ್ಪಿತ್ತು.
ಅಲ್ಪಸಂಖ್ಯಾತರ ಕೋಟಾದಡಿ ನಸೀರ್ಅಹಮದ್,ಹಿಂದುಳಿದ ಕೋಟಾದಡಿ ಸವಿತಾ ಸಮುದಾಯದ ಎಂ.ಸಿ. ವೇಣುಗೋಪಾಲ್ ಅವರಿಗೆ ಅವಕಾಶ ನೀಡಲಾಗಿದೆ.
ಬಿಜೆಪಿಯಲ್ಲಿ ಆಯ್ಕೆ ಕಸರತ್ತು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ನ ಮೂರು ಸ್ಥಾನಗಳಿಗೆ ನಡೆಯವ
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಪ್ರಾರಂಭಗೊಂಡಿದ್ದು ಮೂರು ಸ್ಥಾನಗಳಿಗೆ ಒಂದು ಡಜನ್
ಆಕಾಂಕ್ಷಿಗಳಿದ್ದಾರೆ. ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ್, ಬಿ.ಜೆ.ಪುಟ್ಟಸ್ವಾಮಿ, ಸಿ.ಪಿ.ಯೋಗೇಶ್ವರ್ ಪ್ರಮುಖ ಆಕಾಂಕ್ಷಿಗಳಾಗಿದ್ದು, ಇವರ ಜತೆಗೆ ಇನ್ನೂ ಹಲವರು ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಬಹುತೇಕ ಸೋಮವಾರ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ. ಮೂರು ಸ್ಥಾನ ಗೆಲ್ಲಲು ಬಿಜೆಪಿಗೆ ಎಂಟು ಶಾಸಕರ ಮತ ಕೊರತೆಯಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ.