ಮಾಜಿ ಡಿಸಿಎಂ ಅಶೋಕ್ಗೆ ಭೂ ಕಂಟಕ
Team Udayavani, Sep 26, 2018, 6:00 AM IST
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ವಿರುದ್ಧದ ಬಗರ್ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ ತನಿಖೆಗೆ ಹೈಕೋರ್ಟ್ ಮಂಗಳವಾರ ಅಸ್ತು ಎಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾ.ಆರ್.ಬಿ.ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠ, ಇದೇ ವೇಳೆ ಎಫ್ಐಆರ್ಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಸಹ ತೆರವುಗೊಳಿಸಿತು. ಹೀಗಾಗಿ, ಮಾಜಿ ಡಿಸಿಎಂ ಈಗ ವಿಚಾರಣೆ ಎದುರಿಸಬೇಕಾಗಿದೆ.
ಮಂಗಳವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ಎಫ್ಐಆರ್ ರದ್ದುಪಡಿಸುವುದು ಸಮಂಜಸವಲ್ಲ. ತನಿಖೆ ಪೂರ್ಣಗೊಳಿಸಿ ಎಸಿಬಿ ಅಧಿಕಾರಿಗಳು ಅಧೀನ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿ. ಆನಂತರ ನಿಮ್ಮನ್ನು ಸಮರ್ಥಿಸಿಕೊಳ್ಳಲು ಅವಕಾಶ ಇದ್ದೇ ಇರುತ್ತಲ್ಲಾ. ತನಿಖೆ ನಡೆಯುವುದೇ ಬೇಡ ಎಂದರೆ ಹೇಗೆ ಎಂದು ಅರ್ಜಿದಾರರ ಪರ ವಕೀಲರಿಗೆ ಹೇಳಿ, ಪ್ರಕರಣದ ತನಿಖೆ ಮುಂದುವರಿಸುವಂತೆ ಎಸಿಬಿ ಅಧಿಕಾರಿಗಳಿಗೆ ಸೂಚಿಸಿತು.