ಮೇಕೆದಾಟು ಯೋಜನೆ : ನಿತಿನ್ ಗಡ್ಕರಿ ಭೇಟಿ ಮಾಡಿದ ದೇವೇಗೌಡ
Team Udayavani, Oct 5, 2018, 6:45 AM IST
ಬೆಂಗಳೂರು:ರಾಜ್ಯದ ಬಹುನಿರೀಕ್ಷಿತ ಮೇಕೆದಾಟು ಯೋಜನೆ ಜಾರಿಗೆ ಕರ್ನಾಟಕ ಸರ್ಕಾರಕ್ಕೆ ಎಲ್ಲ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
ಗುರುವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭೇಟಿ ಮಾಡಿ ಮೇಕೆದಾಟು ಯೋಜನೆ ಕುರಿತು ಚರ್ಚಿಸಿದ ಸಂದರ್ಭದಲ್ಲಿ, ಯೋಜನೆಗೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಅನುಮತಿ ಸೇರಿ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ತಿಳಿಸಿದರು ಎಂದು ಹೇಳಲಾಗಿದೆ.
ಯೋಜನೆ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು. ಕಾವೇರಿ ನದಿ ನೀರಿನ ಸದ್ಬಳಕೆ ಹಾಗೂ ಕುಡಿಯುವ ನೀರು ಪೂರೈಕೆ ಉದ್ದೇಶದಿಂದ ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಲಿರುವ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ. ತಮಿಳುನಾಡಿನ ಹಿತಾಸಕ್ತಿಗೂ ಧಕ್ಕೆಯಾಗುವುದುಇಲ್ಲ. ಸುಪ್ರೀಂಕೋರ್ಟ್ ಕಾವೇರಿ ನದಿ ನೀರು ಹಂಚಿಕೆ ಕುರಿತು ನೀಡಿರುವ ತೀರ್ಪು ವ್ಯಾಪ್ತಿಯಲ್ಲೇ ಇದು ಬರಲಿದೆ ಎಂದು ದೇವೇಗೌಡರು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು.
ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಕಾವೇರಿಯ ಹೆಚ್ಚುವರಿ ನೀರು ಸಂಗ್ರಹಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು ಎನ್ನಲಾಗಿದೆ.ಇದೇ ಸಂದರ್ಭದಲ್ಲಿ ದೇವೇಗೌಡರು ಮೇಕೆದಾಟು ಯೋಜನೆ ಜಾರಿ ಸಂಬಂಧ ಕರ್ನಾಟಕದ ಮನವಿಯನ್ನು ನಿತಿನ್ ಗಡ್ಕರಿ ಅವರಿಗೆ ನೀಡಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಉಪಸ್ಥಿತರಿದ್ದರು.