ಬಸ್ ದರ ಏರಿಕೆ ಸದ್ಯಕ್ಕಿಲ್ಲ: ಸಿಎಂ
Team Udayavani, Oct 13, 2018, 8:48 AM IST
ಬೆಂಗಳೂರು: ಸಾರಿಗೆ ಇಲಾಖೆಯ ಬಸ್ ದರ ಏರಿಕೆಯ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬ್ರೇಕ್ ಹಾಕಿದ್ದು, ಸಂಸ್ಥೆಗಳ ನಷ್ಟ ಸರಿದೂಗಿಸಲು ಪರ್ಯಾಯ ಆದಾಯದ ಮೂಲ ಹುಡುಕುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಸ್ ದರ ಏರಿಕೆ ಪ್ರಸ್ತಾಪವನ್ನು ತಳ್ಳಿ ಹಾಕಿದ್ದು, ಸಾರಿಗೆ ನಿಗಮಗಳ ನಷ್ಟ ತುಂಬಿಕೊಳ್ಳಲು ಪ್ರಯಾಣಿಕರ ಆಶಯಗಳನ್ನು ಅರ್ಥೈಸಿಕೊಂಡು ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಯ ಈ ನಿರ್ಧಾರದಿಂದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಯಾಣಿಕರಿಗೆ ಮೂಲ ಸೌಲಭ್ಯ ಮಾತ್ರವಲ್ಲದೆ ಅವರಿಗೆ ಅಗತ್ಯವಾದ ಸೌಕರ್ಯ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು. ಪ್ರಯಾಣಿಕರಿಗೆ ಹೊರೆಯಾಗದಂತೆ ಇಲಾಖೆಯ ನಷ್ಟವನ್ನು ಸರಿದೂಗಿಸಲು ಯೋಜನೆ ರೂಪಿಸುವಂತೆ ಸೂಚಿಸಿದ್ದಾರೆ. ಮೆಟ್ರೋ ರೈಲಿನೊಂದಿಗೆ ಸಮನ್ವಯ ಸಾಧಿಸುವತ್ತ ಗಮನ ಹರಿಸಬೇಕು, ಅಲ್ಲದೆ, ಬಸ್ ದರ ಹೆಚ್ಚಳ ಮಾಡುವ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಾರಿಗೆ ಸಂಸ್ಥೆಗಳು ಸುಮಾರು 3 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿವೆ. ನಷ್ಟ ಸರಿದೂಗಿಲು ಮುಖ್ಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿ ಪರ್ಯಾಯ ಆದಾಯದ ಮಾರ್ಗಗಳನ್ನು ಹುಡುಕುವಂತೆ ನಿರ್ದೇಶಿಸಿದ್ದೇನೆ ಎಂದು ಹೇಳಿದರು.