ರಾಜ್ ಮಾದರಿಯಲ್ಲೇ ಅಂಬಿ ಸ್ಮಾರಕ
Team Udayavani, Nov 27, 2018, 12:24 PM IST
ಮಂಡ್ಯ: “ಕನ್ನಡದ ಮೇರುನಟ ಡಾ.ರಾಜ್ಕುಮಾರ್ ಸ್ಮಾರಕದ ಮಾದರಿಯಲ್ಲೇ ಸ್ನೇಹಜೀವಿ ಅಂಬರೀಶ್ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ಅಂಬರೀಶ್ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ಕೊಂಡೊಯ್ಯುವ ಮುನ್ನ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ ಸ್ಮಾರಕವಿರುವ ಕಂಠೀರವ ಸ್ಟುಡಿಯೋದಲ್ಲೇ ಅಂಬರೀಶ್ ಸ್ಮಾರಕವನ್ನು ನಿರ್ಮಿಸಲು ಉದ್ದೇಶಿಸಿರುವುದಾಗಿ ತಿಳಿಸಿದರು.
ಅಂಬರೀಶ್ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ ಅಪಾರ. ಡಾ. ರಾಜ್ಕುಮಾರ್ ಕನಸಾಗಿದ್ದ ಕಲಾವಿದರ ಭವನವನ್ನು ಸಾಕಾರಗೊಳಿಸಿದ್ದಾರೆ. ಅವರ ಸೇವೆಯನ್ನು ನೆನೆದು ಸ್ಮಾರಕ ನಿರ್ಮಾಣಕ್ಕೆ ಮುಂದಾಗಿರುವುದಾಗಿ ಹೇಳಿದರು.
ಬೇಡ ಎನ್ನಬೇಡಿ: ಅಂಬರೀಶ್ ಸ್ಮಾರಕವನ್ನು ಕಂಠೀರವ ಸ್ಟುಡಿಯೋದಲ್ಲಿ ಕಟ್ಟುವುದು ಬೇಡ ಎಂದು ವಕೀಲರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ನನ್ನ ಗಮನಕ್ಕೆ ಬಂದಿದೆ. ಕನ್ನಡ ಭಾಷೆ ಹಾಗೂ ನಾಡಿಗೆ ಸೇವೆ ಸಲ್ಲಿಸಿದವರಿಗೆ ಗೌರವ ಸಲ್ಲಿಸಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ.
ಸ್ಮಾರಕ ಬೇಡ ಎಂದು ಅರ್ಜಿ ಸಲ್ಲಿಸಿರುವ ವಕೀಲರು ಮೊದಲು ಹೃದಯ ವೈಶಾಲ್ಯತೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಲವು ಸಮಸ್ಯೆಗಳ ನಡುವೆಯೂ ಅಂತಿಮ ದರ್ಶನ ಸುಸೂತ್ರವಾಗಿ ನಡೆದಿದೆ. ಇದಕ್ಕೆ ಕಾರಣರಾದ ಜಿಲ್ಲೆಯ ಜನರಿಗೆ ಕೃತಜ್ಞತೆ ಅರ್ಪಿಸಿದರು.
ಅಂಬಿ ಹೆಸರಿನಲ್ಲಿ ಯೋಜನೆ: ಅಂಬರೀಶ್ ಹೆಸರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಯೋಜನೆ ರೂಪಿಸಲಾಗುವುದು. ಯಾವ ರೀತಿ ಯೋಜನೆ ರೂಪಿಸಬೇಕು, ಏನೇನು ಕಾರ್ಯಕ್ರಮಗಳನ್ನು ನೀಡಬೇಕು ಎಂಬುದರ ಕುರಿತಂತೆ ಎಲ್ಲರಿಂದಲೂ ಮಾಹಿತಿ ಪಡೆದು, ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.