ಡಿ.18ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ
Team Udayavani, Dec 10, 2018, 6:35 AM IST
ಬೆಂಗಳೂರು : ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ಅಹವಾಲು, ಗೊಂದಲಗಳನ್ನು ನಿವಾರಣೆ ಮಾಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಸಭೆ ನಡೆಸುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ ಹೇಳಿದ್ದರು.
ಆದರೆ, ಡಿ 18ರಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕುಮಾರಸ್ವಾಮಿ ಆಗಮಿವುದು ಅನುಮಾನ ಎನ್ನಲಾಗಿದೆ ಸಭೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಅಲ್ಲದೆ ಅಧಿಕೃತವಾಗಿ ಶಾಸಕರಿಗೆ ಕಳುಹಿಸಿದ್ದ ಆಹ್ವಾನ ಪತ್ರದಲ್ಲಿಯೂ ಸೂಚಿಸಲಾಗಿತ್ತು.
ಡಿ.8 ರಂದು ನಡೆಸಲು ಉದ್ದೇಶಿಸಿ ಮುಂದೂಡಲ್ಪಟ್ಟಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಡಿ.18 ರಂದು ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಬೆಂಗಳೂರಿನ ಕಾಂಗ್ರೆಸ್ ಸಭೆಗೆ ಕುಮಾರಸ್ವಾಮಿ ತೆರಳುವ ಸಾಧ್ಯತೆ ಇತ್ತು. ಆದರೆ, ಮುಂದೂಡಲ್ಪಟ್ಟ ಬೆಳಗಾವಿ ಸಭೆಗೆ ಹಾಜರಾಗುತ್ತಾಯೇ ಎಂಬುದನ್ನು ಕಾದುನೋಡಬೇಕಿದೆ .
ಅಧಿವೇಶನ ಆರಂಭಕ್ಕೂ ಮೊದಲೇ ಕಾಂಗ್ರೆಸ್ ಶಾಸಕರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿ ಅವರಿಂದ ಸದನದಲ್ಲಿ ಅಸಹಕಾರ ಉಂಟಾಗದಂತೆ ನೋಡಿಕೊಳ್ಳಬೇಕು ಎನ್ನುವ ಹಿನ್ನೆಲೆಯಲ್ಲಿ ಈ ಪ್ರಯತ್ನ ಮಾಡಲಾಗಿತ್ತು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮೊದಲ ವಾರ ವಿದೇಶ ಪ್ರವಾಸ ಕೈಗೊಂಡಿರುವುದರಿಂದ ಅವರು ವಿದೇಶದಿಂದ ಮರಳಿದ ನಂತರ ಎರಡನೇ ವಾರದಲ್ಲಿ ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಸಂಪುಟ ವಿಸ್ತರಣೆ ಖಚಿತ
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಡಿ.18ರಂದು ನಡೆಯಲಿದ್ದು, ಇದಾದ ನಂತರ ಸಚಿವ ಸಂಪುಟ ವಿಸ್ತರಣೆ ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆರು.
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಉಭಯ ಪಕ್ಷಗಳ ನಾಯಕರು ತೀರ್ಮಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತ ಎಂದರು.
ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಅಸಮಾಧಾನ ಉಂಟಾಗಿದೆ ಎಂಬುದು ಸೇರಿದಂತೆ ಹಲವು ಅಂಶವನ್ನು ಗಮನದಲ್ಲಿಟ್ಟುಕೊಂಡೇ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿದೆ. ಅಧಿವೇಶನ ಮುಗಿದ ಬಳಿಕ ಡಿ.22ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಸಭಾಪತಿ ಸ್ಥಾನದ ವಿಷಯವಾಗಿ ಹಿರಿಯ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಚುನಾವಣೆ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಸಿದವರು ಸಭಾಪತಿ ಆಗುತ್ತಾರೆ ಎಂದು ಹೇಳಿದರು.