ಭಿನ್ನಾಭಿಪ್ರಾಯ ಬದಿಗೊತ್ತಿ:ಬಿ.ಎಸ್.ಯಡಿಯೂರಪ್ಪ
Team Udayavani, Jan 1, 2019, 12:30 AM IST
ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸೂಚಿಸುವ ವ್ಯಕ್ತಿಯನ್ನು ಗೆಲ್ಲಿಸಿಕೊಂಡು ಬರಲು ಶ್ರಮಿಸುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸೋಮವಾರ ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳ ಮುಖಂಡರೊಂದಿಗೆ ಲೋಕಸಭೆ ಚುನಾವಣೆ ಕುರಿತು ಸಿದ್ದತೆ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಎಲ್ಲ ಜಿಲ್ಲೆಗಳಲ್ಲಿಯೂ ಆಕಾಂಕ್ಷಿಗಳು ಅನೇಕ ಜನರಿದ್ದಾರೆ. ಆದರೆ, ಪಕ್ಷದ ಹೈಕಮಾಂಡ್ ಯಾರನ್ನು ಅಭ್ಯರ್ಥಿಯನ್ನಾಗಿ ಸೂಚಿಸುತ್ತದೆಯೋ ಅವರನ್ನು ಗೆಲ್ಲಿಸಿಕೊಂಡು ಬರಲು ಆಂತರಿಕ ಭಿನ್ನಾಭಿಪ್ರಾಯ ಬದಿಗೊತ್ತಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು ಎಂದು ಹೇಳಲಾಗಿದೆ.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ನಾವೆಲ್ಲರೂ ಸ್ವಾರ್ಥ ಬಿಟ್ಟು ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು. 2014 ಲೋಕಸಭೆ ಚುನಾವಣೆಗೂ ಮುಂಬರುವ ಲೋಕಸಭೆ ಚುನಾವಣೆಗೂ ಸಾಕಷ್ಟು ವ್ಯತ್ಯಾಸಗಳಿವೆ. ಈ ಬಾರಿ ಎಲ್ಲ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಜೊತೆಗೆ ಮಹಾ ಘಟಬಂಧನ್ ಮಾಡಿಕೊಳ್ಳುತ್ತಿರುವುದರಿಂದ ಬಿಜೆಪಿಗೆ ಕಠಿಣ ಸವಾಲು ಎದುರಿಸಬೇಕಾಗುತ್ತದೆ. ರಾಜ್ಯದಲ್ಲಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಇರುವುದರಿಂದ ಎರಡೂ ಪಕ್ಷಗಳು ಒಟ್ಟಿಗೆ ಸ್ಪರ್ಧೆ ಮಾಡುವುದರಿಂದ ಹೆಚ್ಚು ಶ್ರಮ ವಹಿಸಬೇಕು ಎಂದು ಹೇಳಿದರು ಎನ್ನಲಾಗಿದೆ.
ತುಮಕೂರಿನಿಂದ ಬಸವರಾಜ್, ಸುರೇಶ್ಗೌಡ, ಸೊಗಡು ಶಿವಣ್ಣ, ಚಾಮರಾಜನಗರದಿಂದ ಮಾಜಿ ಸಚಿವ ಶಿವಣ್ಣ ಹಾಗೂ ವಿ.ಶ್ರೀನಿವಾಸ್ ಪ್ರಸಾದ್ ಹೆಸರು ಕೇಳಿ ಬಂದಿದೆ. ಹಾಸನದಿಂದ ಪ್ರೀತಂಗೌಡ ಹಾಗೂ ಸಿ.ಟಿ. ರವಿ ಹೆಸರು ಕೇಳಿ ಬಂದಿದೆ. ಮಂಡ್ಯದಿಂದ ಸಿದ್ದರಾಮಯ್ಯ, ಚಿತ್ರದುರ್ಗದಿಂದ ಮಾಜಿ ಸಂಸದ ಜನಾರ್ದನ ಸ್ವಾಮಿ ಅವರ ಹೆಸರು ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ತಿಳಿದು ಬಂದಿದೆ.