ಮೈಸೂರು, ಬಾಗಲಕೋಟೆ ಸೇರಿ 3 ರೈಲ್ವೆ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ!
Team Udayavani, Feb 22, 2019, 6:44 AM IST
ಬೆಂಗಳೂರು:ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದನಾ ದಾಳಿ ನಡೆದ ನಂತರ ಉಗ್ರಗಾಮಿ ಸಂಘಟನೆಗಳು ಮತ್ತಷ್ಟು ದಾಳಿ ನಡೆಸುವ ಸಂಚು ರೂಪಿಸಿವೆ ಎಂಬ ಮಾಹಿತಿಯ ನಡುವೆಯೇ ರಾಜ್ಯದ ಪ್ರಮುಖ ಮೂರು ರೈಲು ನಿಲ್ದಾಣಗಳಲ್ಲಿ ಹುಸಿ ಬಾಂಬ್ ಕರೆ ಬಂದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ಕರ್ನಾಟಕದ ಮೈಸೂರು, ಬಾಗಲಕೋಟೆ, ಚಾಮರಾಜನಗರ ಜಿಲ್ಲೆಯ ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಪೊಲೀಸರು ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳದ ಮೂಲಕ ಪರಿಶೀಲನೆ ನಡೆಸಿದ್ದರು. ಆದರೆ ಪರಿಶೀಲನೆ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ವಿವರಿಸಿದ್ದಾರೆ. ಆದರೆ ಈ ಕರೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಮೂರು ರೈಲ್ವೆ ನಿಲ್ದಾಣಗಳಲ್ಲಿ ಬಿಗಿ ಬಂದೋಬಸ್ತ್, ತಪಾಸಣೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.