ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡುವಂತಿಲ್ಲ; ಸುಪ್ರೀಂಕೋರ್ಟ್
Team Udayavani, Mar 27, 2017, 12:52 PM IST
ನವದೆಹಲಿ: ಎಲ್ಲಾ ಯೋಜನೆ, ಸ್ಕೀಂಗಳಿಗೆ ಆಧಾರ್ ಕಡ್ಡಾಯ ಮಾಡುತ್ತಿರುವ ಬೆನ್ನಲ್ಲೇ, ಸರ್ಕಾರಿ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ನೀಡಲು ಆಧಾರ್ ಕಡ್ಡಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.
ಆಧಾರ್ ಕಡ್ಡಾಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸಿಜೆಐ ಜೆ.ಎಸ್. ಖೇಹರ್ ಈ ಅಭಿಪ್ರಾಯವ್ಯಕ್ತಪಡಿಸಿದ್ದು, ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಡ್ಡಾಯ ಮಾಡುವುದನ್ನು ಕೇಂದ್ರ ಸರ್ಕಾರ ಮುಂದುವರಿಸಲಿ ಎಂದು ಸ್ಪಷ್ಟಪಡಿಸಿದರು. ಆಧಾರ್ ಇಲ್ಲ ಎಂಬ ನೆಪವೊಡ್ಡಿ ಅರ್ಹ ಫಲಾನುಭವಿಗಳೂ ಸೌಲಭ್ಯದಿಂದ ವಂಚಿತರಾಗಬಹುದು ಎಂದು ಹೇಳಿದರು.
ಆದರೆ ಆಧಾರ್ ಕಡ್ಡಾಯ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ 7 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠದ ರಚನೆಯ ಅಗತ್ಯವಿದೆ ಎಂದು ಹೇಳಲಾಗಿದ್ದು, ಅದು ಈ ಸಂದರ್ಭದಲ್ಲಿ ಸಾಧ್ಯವಿಲ್ಲ ಎಂದು ತಿಳಿಸಿದರು.
ಆದಾಯ ತೆರಿಗೆ ಸಲ್ಲಿಕೆ ಮತ್ತು ಪ್ಯಾನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಹೇಳಿತ್ತು. ಅಲ್ಲದೇ ಬೆಳೆ ವಿಮೆ ಪಡೆಯಲು ಕೂಡಾ ಆಧಾರ್ ಕಡ್ಡಾಯ ಎಂದು ಸೂಚಿಸಿತ್ತು.