ಕದನ ವಿರಾಮ ಉಲ್ಲಂಘಿಸಿ ಪಾಕ್ ಸೇನೆಯಿಂದ ಗುಂಡಿನ ದಾಳಿ: ಭಾರತೀಯ ಯೋಧ ಹುತಾತ್ಮ
Team Udayavani, Aug 30, 2020, 3:06 PM IST
ಜಮ್ಮು ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.
ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಪರಿಣಾಮವಾಗಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆ.
ಪಾಕಿಸ್ತಾನದ ಸೇನೆ ಇಂದು ಬೆಳಿಗ್ಗೆ ನೌಶೇರಾದ ಕಲ್ಸಿಯಾನ್, ಖಂಗರ್, ಭವಾನಿ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಭಾರತೀಯ ಯೋಧರೊಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ ಎಂದು ವರದಿ ತಿಳಿಸಿದೆ.
ಭಾರತೀಯ ಸೇನೆ ಕೂಡ ಗುಂಡಿನ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.