Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ
Team Udayavani, Apr 16, 2024, 8:05 AM IST
ಭುವನೇಶ್ವರ: ಒಡಿಶಾದ ಜಜ್ಪುರ ಜಿಲ್ಲೆಯಲ್ಲಿ ಸೋಮವಾರ ಸಂಜೆ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
40 ಮಂದಿ ಪ್ರಯಾಣಿಕರಿದ್ದ ಬಸ್ ಪುರಿಯಿಂದ ಕೋಲ್ಕತ್ತಾಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-16ರ ಬಾರಾಬತಿ ಸೇತುವೆ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಜಜ್ ಪುರದ ಪೊಲೀಸ್ ಅಧೀಕ್ಷಕರು, ವೈದ್ಯರ ತಂಡ ಮತ್ತು ಇತರ ಜಿಲ್ಲಾಡಳಿತ ಅಧಿಕಾರಿಗಳು ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಕಟರ್ ಬಳಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ.
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಾವಿಗೆ ಸಂತಾಪ ಸೂಚಿಸಿದ್ದು, ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 3 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.