ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಿ: ಕಾಂಗ್ರೆಸ್ ಆಗ್ರಹ
Team Udayavani, May 17, 2018, 3:31 PM IST
ಹೊಸದಿಲ್ಲಿ : ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ ಎಸ್ ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕಾಂಗ್ರೆಸ್ ಪಕ್ಷ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳನ್ನು ಆಗ್ರಹಿಸಿದೆ.
2011ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರು ಕರ್ನಾಟಕದ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರು ರಾಜ್ಯದಲ್ಲಿನ ಆಳುವ ಬಿಜೆಪಿ ಸರಕಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅವರನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳನ್ನು ಆಗ್ರಹಿಸಿದ್ದರು.
ಮೋದಿ ಅವರು 2011ರ ಮೇ 19ರಂದು ಮಾಡಿದ್ದ ಟ್ವೀಟ್ನಲ್ಲಿ “ಕರ್ನಾಟಕದ ರಾಜ್ಯಪಾಲರು ಭಾರತದ ಒಕ್ಕೂಟ ಸಂರಚನೆಯನ್ನು ನಾಶಮಾಡುವುದಕ್ಕೆ ಕಟಿಬದ್ಧರಾಗಿರುವಂತಿದೆ; ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು’ ಎಂದು ಹೇಳಿದ್ದರು.
ಅಂದು ಮೋದಿ ಮಾಡಿದ್ದ ಟ್ವೀಟನ್ನೇ ಈಗ ಕಾಂಗ್ರೆಸ್ ಪಕ್ಷ ಉಲ್ಲೇಖೀಸಿ ‘ಹಾಲಿ ಸ್ಥಿತಿಯಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ನಡೆದಿರುವ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು’ ಎಂದು ಒತ್ತಾಯಿಸಿದೆ.