ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Feb 4, 2020, 3:06 AM IST
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೇಸ್ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಸೋಮವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ಬೆಂಗಳೂರು ನಗರ ಘಟಕದ ಕಾರ್ಯಕರ್ತರು, ಅನಂತ್ ಕುಮಾರ್ ಹೆಗಡೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ದೇಶದ್ರೋಹಿ ಅನಂತ್ಕುಮಾರ್ ಹೆಗಡೆಯನ್ನು ಬಂಧಿಸಿ, ಗಡಿಪಾರು ಮಾಡಿ ಎಂದು ಘೋಷಣೆ ಕೂಗಿದರು.
ಅನಂತ್ ಕುಮಾರ್ ಮಾನಸಿಕ ಅಸ್ವಸ್ಥರಾಗಿದ್ದಾರೆ. ಹಾಗಾಗಿಯೇ ಅವರು ಪದೇಪದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಸಂಸದ ಸ್ಥಾನದಲ್ಲಿ ಮುಂದುವರಿಯಲು ಅವರು ಅರ್ಹರಲ್ಲ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ಮನೋಹರ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಜತೆ ಒಳಒಪ್ಪಂದ ಮಾಡಿಕೊಂಡವರನ್ನು ಇತಿಹಾಸದ ಪುಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಲಾಯಿತು’ ಎಂದು ಹೇಳುವ ಮೂಲಕ ಗಾಂಧೀಜಿ ಸೇರಿ ಇಡೀ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ.
ಆ ಮೂಲಕ ಇಡೀ ದೇಶವನ್ನೇ ಅವಮಾನಿಸಿದ್ದಾರೆ. ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವೇ, ಬಿಜೆಪಿಯವರು ತಾವು ಗಾಂಧಿ ವಿರೋಧಿಗಳು ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದರು.
ಗಾಂಧೀಜಿ ಅವಹೇಳನ: ಕ್ಷಮೆ ಕೋರಲು ಸೂಚನೆ
ನವದೆಹಲಿ: ಮಹಾತ್ಮ ಗಾಂಧಿ ಕುರಿತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆಯವರು ನೀಡಿರುವ ಹೇಳಿಕೆ ಗಳಿಗೆ ಪಕ್ಷದ ವರಿಷ್ಠರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ವಿವಾದಿತ ಹೇಳಿಕೆ ನೀಡಿದ್ದಕ್ಕಾಗಿ ಕ್ಷಮೆ ಯಾಚಿಸು ವಂತೆ ಅವರಿಗೆ ಸೂಚನೆ ನೀಡ ಲಾಗಿದೆ ಎಂದು ಬಿಜೆಪಿ ಮೂಲ ಗಳು ಸೋಮವಾರ ನವ ದೆಹಲಿ ಯಲ್ಲಿ ಖಚಿತಪಡಿಸಿವೆ.
ಹಿರಿಯ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿ ಅನಂತ ಕುಮಾರ್ ಹೆಗಡೆ ಹೇಳಿಕೆ ಖಂಡನೀಯ. ಮಹಾತ್ಮ ಗಾಂಧಿಯವರಿಗೆ ಮಾಡುವ ಯಾವುದೇ ರೀತಿಯ ಅವಮಾನವನ್ನು ಪಕ್ಷ ಒಪ್ಪುವುದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಕಾರ್ಯ ಕ್ರಮ ದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆಂದು ಆರೋಪಿಸಲಾಗಿದೆ.
ಪ್ರಧಾನಿಯೇ ಹೇಳಿಕೆ ನೀಡಲಿ: ಕೇಂದ್ರದ ಮಾಜಿ ಸಚಿವರು ಹೇಳಿದ್ದಾರೆ ಎನ್ನಲಾಗಿರುವ ಮಾತುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ನಾಯಕ ಆನಂದ ಶರ್ಮಾ ಹೇಳಿದ್ದಾರೆ. ಬಿಜೆಪಿ ನಾಯಕರು ರಾಷ್ಟ್ರೀಯ ಹೋರಾಟಕ್ಕೆ ಅವಮಾನ ಮಾಡುತ್ತಿದ್ದಾರೆ.
ಮಹಾತ್ಮ ಗಾಂಧಿಯವರ 150ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮಗಳನ್ನು ಅತ್ಯಂತ ಗಂಭೀರತೆಯಿಂದ ನಡೆಸುವುದೇ ಆಗಿದ್ದರೆ ಖುದ್ದಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಸಂಸತ್ನಲ್ಲಿ ಹೆಗಡೆ ಮಾತುಗಳಿಗೆ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ಪ್ರಮಾಣ ಪತ್ರ ಬೇಕಾಗಿಲ್ಲ: ಇದೇ ವೇಳೆ “ಮಹಾತ್ಮ ಗಾಂಧಿ ನೇತೃತ್ವದ ಸ್ವಾತಂತ್ರ್ಯ ಹೋರಾಟ ನಾಟಕ’ ಎಂದು ಸಂಸದ ಅನಂತ ಕುಮಾರ್ ಹೇಳಿದ್ದಾರೆಂಬ ಮಾತುಗಳಿಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿದೆ. “ರಾಷ್ಟ್ರಪಿತ ನಡೆಸಿರುವ ಹೋರಾಟಕ್ಕೆ ಬ್ರಿಟಿಷರ ಮನಃಸ್ಥಿತಿ ಹೊಂದಿದ ಚಮಚಾಗಳು ಮತ್ತು ಬೇಹುಗಾರರ ಪ್ರಮಾಣ ಪತ್ರ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಟ್ವೀಟ್ ಮಾಡಿದ್ದಾರೆ. ಜತೆಗೆ, ಹೆ ಗ ಡೆ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಬೇಕು ಎಂದೂ ಕಾಂಗ್ರೆಸ್ ಆಗ್ರಹಿಸಿದೆ.