ಇಂದು ಜ್ಞಾನವಾಪಿ ಕೇಸಿನ ತೀರ್ಪು: ಬಿಗಿ ಬಂದೋಬಸ್ತ್, ನಿಷೇಧಾಜ್ಞೆ
Team Udayavani, Sep 12, 2022, 7:20 AM IST
ವಾರಾಣಸಿ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ- ಶೃಂಗಾರಗೌರಿ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೋಮವಾರ ಪ್ರಕಟವಾಗುವ ನಿರೀಕ್ಷೆಯಿದೆ.
ಅತ್ಯಂತ ಸೂಕ್ಷ್ಮವಾದ ಈ ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ಕೋರ್ಟ್ನ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ಕಳೆದ ತಿಂಗಳು ತೀರ್ಪನ್ನು ಸೆ.12ಕ್ಕೆ ಕಾಯ್ದಿರಿಸಿದ್ದರು.
ತೀರ್ಪು ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವಾರಾಣಸಿಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ನಿಷೇಧಾಜ್ಞೆಯನ್ನೂ ಜಾರಿ ಮಾಡಲಾಗಿದೆ. ಧಾರ್ಮಿಕ ನಾಯಕರನ್ನು ಕರೆದು ಶಾಂತಿ ಸಭೆ ನಡೆಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನವನ್ನೂ ನಡೆಸಿದ್ದಾರೆ ಎಂದು ಪೊಲೀಸ್ ಆಯುಕ್ತ ಸತೀಶ್ ಗಣೇಶ್ ಹೇಳಿದ್ದಾರೆ.
ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಹಿಂದೂ ದೇವರ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಕೋರಿ ಐವರು ಮಹಿಳೆಯರು ಕೋರ್ಟ್ ಮೆಟ್ಟಿಲೇರಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈಗ ಈ ಅರ್ಜಿಗೆ ಸಂಬಂಧಿಸಿದ ತೀರ್ಪು ಸೋಮವಾರ ಹೊರಬೀಳಲಿದೆ.