ಕಣಿವೆ ಕೊತ ಕೊತ
ಕಾಶ್ಮೀರದಲ್ಲಿನ ಬೆಳವಣಿಗೆ ಬಗ್ಗೆ ಕೇಂದ್ರದಿಂದ ಸ್ಪಷ್ಟನೆ ಕೇಳಿದ ಪ್ರತಿಪಕ್ಷಗಳು
Team Udayavani, Aug 4, 2019, 6:12 AM IST
ಶ್ರೀನಗರ/ನವದೆಹಲಿ: ದಿಢೀರನೇ ಹೆಚ್ಚುವರಿ ಸೇನೆ ನಿಯೋಜನೆಗೊಂಡಿದ್ದರಿಂದ ಭಯಭೀತರಾಗಿದ್ದ ಕಾಶ್ಮೀರ ಕಣಿವೆಯ ಜನ, ಅಮರನಾಥ ಯಾತ್ರೆ, ಮಚಿಲ್ ಯಾತ್ರೆಯ ರದ್ದತಿಯಿಂದಾಗಿ ಮತ್ತಷ್ಟು ಗೊಂದಲಕ್ಕೀಡಾಗಿದ್ದಾರೆ.
ಕೇಂದ್ರ ಸರ್ಕಾರ ಏಕೆ ಕಣಿವೆ ರಾಜ್ಯಕ್ಕೆ ಭಾರೀ ಪ್ರಮಾಣದ ಸೇನೆಯನ್ನು ಕಳುಹಿಸುತ್ತಿದೆ ಎಂಬ ಬಗ್ಗೆ ಯಾರಲ್ಲೂ ಮಾಹಿತಿ ಇಲ್ಲ. ಸ್ವತಃ ಸ್ಥಳೀಯ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಇಡೀ ಬೆಳವಣಿಗೆ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿವೆ. ಇನ್ನು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಮಾಡಿದ ಕಾಂಗ್ರೆಸ್ ನಾಯಕರು, ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಸುಖಾಸುಮ್ಮನೆ ಭೀತಿಯ ವಾತಾವರಣ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ನಡುವೆ, ಪ್ರಸಕ್ತ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಕಾಶ್ಮೀರ ವಿವಾದದ ಬಗ್ಗೆ ತಾರ್ಕಿಕ ಅಂತ್ಯವೊಂದನ್ನು ಕಾಣಿಸಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಹೀಗಾಗಿಯೇ ಕೇಂದ್ರ ಸರ್ಕಾರ ಭಾರೀ ಪ್ರಮಾಣದಲ್ಲಿ ಭದ್ರತಾ ಪಡೆಗಳನ್ನು ಕಳಿಸುತ್ತಿದೆ, ಅಮರನಾಥ ಯಾತ್ರೆಯನ್ನೂ ರದ್ದು ಮಾಡಿದೆ ಎಂದು ರಾಜಕೀಯ ನೇತಾರರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ ಮಲಿಕ್, ಯಾವುದೇ ವದಂತಿಗಳಿಗೆ ಕಿವಿಗೊಟ್ಟು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ ಎಂದು ಜನರಿಗೆ ಕರೆ ನೀಡಿದ್ದಾರೆ.
ಭದ್ರತಾ ಪಡೆಗಳು ಹೇಳ್ಳೋದೇನು?: ಜಮ್ಮು ಕಾಶ್ಮೀರದಲ್ಲಿ ಬೀಡುಬಿಟ್ಟಿರುವ ಪಾಕಿಸ್ತಾನ ಪ್ರಾಯೋಜಿತ ಉಗ್ರ ಸಂಘಟನೆಗಳು, ಸೋಪೋರ್ ಸೇರಿದಂತೆ ಕಾಶ್ಮೀರದ ಇನ್ನಿತರ ಪ್ರಾಂತ್ಯಗಳಲ್ಲಿ ಸುಧಾರಿತ ಸ್ಫೋಟಕಗಳನ್ನು ಉಪಯೋಗಿಸಿ ವ್ಯಾಪಕವಾಗಿ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದವು. ಅದರಲ್ಲೂ ಮುಖ್ಯವಾಗಿ ಜೈಷ್-ಎ-ಮೊಹಮ್ಮದ್ ಸಂಘಟನೆಯು ಸಾರ್ವಜನಿಕ ಸ್ಥಳಗಳ ಮೇಲಿನ ದಾಳಿಯ ಜತೆಗೆ, ಸೇನಾ ನೆಲೆಗಳ ಮೇಲೂ ದಾಳಿ ನಡೆಸಲು ಸಜ್ಜಾಗಿದ್ದವು. ಗುಪ್ತಚರ ಇಲಾಖೆಗೆ ಈ ವಿಚಾರ ತಿಳಿದಿದ್ದರಿಂದಲೇ ಕಣಿವೆ ರಾಜ್ಯದಲ್ಲಿ ಎಲ್ಲೆಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಈ ಬೆಳವಣಿಗೆಗಳ ಬಗ್ಗೆ ಖಚಿತ ಮಾಹಿತಿಯಿರುವ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಪಿಒಕೆಗೆ ಅಜರ್ ಸಹೋದರ: ವಿಧ್ವಂಸಕ ಕೃತ್ಯಗಳಿಗಾಗಿ ಉಗ್ರರನ್ನು ಸಂಘಟಿಸುವ ಉದ್ದೇಶದಿಂದ ಜೈಶ್ ಎ ಮೊಹಮ್ಮದ್ ಸಂಸ್ಥಾಪಕ ಹಾಗೂ ಉಗ್ರ ಮಸೂದ್ ಅಜರ್ನ ಹಿರಿಯಣ್ಣ ಇಬ್ರಾಹಿಂ ಅಜರ್ ಇತ್ತೀಚೆಗೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಭೇಟಿ ನೀಡಿದ್ದು ಈ ವಿಚಾರ ಗುಪ್ತಚರ ಇಲಾಖೆಗೆ ಮುಟ್ಟಿತ್ತು. ಇವನು ಉಗ್ರರನ್ನು ಕಳುಹಿಸಿ ದಾಳಿ ಮಾಡಬಹುದು ಎಂಬುದನ್ನು ಅರಿತು ಈ ಮಟ್ಟದ ಭದ್ರತೆ ಆಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಿಶ್ತವಾರ್ ಯಾತ್ರೆಯೂ ರದ್ದು: ಅಮರನಾಥ ಯಾತ್ರೆಯೊಂದಿಗೆ 43 ದಿನಗಳ ಕಾಲ ನಡೆಯುವ ಮಚಿಲ್ ಮಾತಾ ಯಾತ್ರಾವನ್ನೂ ನಿಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕಿಶ್ತವಾರ್ನಲ್ಲಿರುವ ಮಾಚಿಲ್ ಎಂಬ ಹಳ್ಳಿಯಲ್ಲಿನ ದುರ್ಗಾ ದೇವಿಯ ದರುಶನಕ್ಕೆ ಹೋಗುವ ಯಾತ್ರೆಯಿದು.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿರುವ ಸ್ಥಳೀಯಾಡಳಿತ ಮಚಿಲ್ ಯಾತ್ರೆಯ ಉದ್ದೇಶ ಹೊಂದಿರುವವರು ಆ ಯೋಜನೆ ಮುಂದೂಡುವಂತೆ ಹಾಗೂ ಈಗಾಗಲೇ ಯಾತ್ರೆಯಲ್ಲಿರುವ ಯಾತ್ರಿಕರು ಕೂಡಲೇ ತಮ್ಮ ಊರುಗಳಿಗೆ ಹಿಂದಿರಬೇಕು ಎಂದು ಸೂಚಿಸಿದೆ.
ಎನ್ಐಟಿ ತರಗತಿಗಳು ರದ್ದು: ಕಣಿವೆ ರಾಜ್ಯದಲ್ಲಿ ಹೆಚ್ಚುವರಿ ಸೇನೆ, ಅಮರನಾಥ ಯಾತ್ರೆ, ಕಿಶ್ತವಾರ್ ಯಾತ್ರೆಗಳು ರದ್ದು ಮುಂತಾದ ಬೆಳವಣಿಗೆಗಳು ಉಂಟಾಗಿರುವ ನಡುವೆಯೇ ಶ್ರೀನಗರದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿ) ಸಂಸ್ಥೆಯು ಅನಿರ್ದಿಷ್ಟಾವಧಿಯವರೆಗೆ ತರಗತಿಗಳನ್ನು ರದ್ದು ಮಾಡಿದೆ. ಸಂಸ್ಥೆಯ ಆದೇಶದ ಹಿನ್ನೆಲೆಯಲ್ಲಿ ಎನ್ಐಟಿಯಲ್ಲಿದ್ದ ವಿದ್ಯಾರ್ಥಿಗಳು, ಶುಕ್ರವಾರದಿಂದಲೇ ಸಂಸ್ಥೆಯ ಕ್ಯಾಂಪಸ್ಸನ್ನು ತೆರವುಗೊಳಿಸುತ್ತಿದ್ದಾರೆ. ಎನ್ಐಟಿಯನ್ನು ಮುಚ್ಚುವಂತೆ ಕೇಂದ್ರ ಸರ್ಕಾರದಿಂದ ಯಾವುದೇ ಆದೇಶ ಬಂದಿರಲಿಲ್ಲ ಎಂದು ಜಿಲ್ಲಾಧಿಕಾರಿ ಶಾಹೀಬ್ ಇಕ್ಬಾಲ್ ಚೌಧರಿ ಸ್ಪಷ್ಟಪಡಿಸಿದ್ದಾರೆ.
ಬ್ರಿಟನ್, ಜರ್ಮನಿಯಿಂದ ಎಚ್ಚರಿಕೆ: ಜಮ್ಮು ಕಾಶ್ಮೀರದ ಪ್ರಕ್ಷುಬ್ಧ ಪರಿಸ್ಥಿತಿಯು ವಿಶ್ವದ ಇತರ ರಾಷ್ಟ್ರಗಳಿಗೂ ತಟ್ಟಿದ್ದು, ಈ ನಡುವೆ, ತನ್ನ ಪ್ರಜೆಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿರುವ ಯು.ಕೆ. ಹಾಗೂ ಜರ್ಮನಿ ಸರ್ಕಾರಗಳು, ತಮ್ಮ ಪ್ರಜೆಗಳಿಗೆ ಕಾಶ್ಮೀರಕ್ಕೆ ತೆರಳದಂತೆ ಸೂಚಿಸಿವೆ. ಅಲ್ಲದೆ, ಈಗಾಗಲೇ ಕಾಶ್ಮೀರದಲ್ಲಿರುವ ತಮ್ಮ ಪ್ರಜೆಗಳು ಈ ಕೂಡಲೇ ಸುರಕ್ಷತಾ ಸ್ಥಳಗಳ ಕಡೆಗೆ ತೆರಳುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್