ಪಟಾಕಿ ಫ್ಯಾಕ್ಟರಿಯಲ್ಲಿ ಭೀಕರ ಬೆಂಕಿ ದುರಂತ 8 ಮಂದಿ ಸಾವು
Team Udayavani, Sep 25, 2017, 12:47 PM IST
ರಾಂಚಿ: ಅಕ್ರಮವಾಗಿ ಮನೆಯೊಂದರಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸಂಭವಿಸಿದ ಭಾರೀ ಅಗ್ನಿ ಅನಾಹುತಕ್ಕೆ ಸುಮಾರು 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಜಾರ್ಖಂಡ್ ನ ಪೂರ್ವ ಸಿಂಗ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ದಳ ತೆರಳಿದ್ದು, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದವು ಎಂದು ವರದಿ ತಿಳಿಸಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಮನೆಗಳಲ್ಲಿ ವಾಸವಾಗಿದ್ದವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.
ಜಾರ್ಖಂಡ್ ನ ಕುಮಾರ್ ದುಬಿ ಗ್ರಾಮದಲ್ಲಿನ ಮನೆಯೊಂದರಲ್ಲಿಯೇ ಬೃಹತ್ ಪ್ರಮಾಣದಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು ಎಂದು ಬರ್ಸೊಲ್ ಪೊಲೀಸ್ ಠಾಣೆಯ ಅಧಿಕಾರಿ ಬಿನೋದ್ ಪಾಸ್ವಾನ್ ತಿಳಿಸಿದ್ದಾರೆ.
ಹಲವು ಮಂದಿ ಮನೆಯ ಅವಶೇಷಗಳ ಅಡಿಯಲ್ಲಿ ಸಿಲುಕಿರುವುದಾಗಿ ವಿವರಿಸಿದ್ದು, ನವರಾತ್ರಿ ಹಿನ್ನೆಲೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಏಕಾಏಕಿ ಮದ್ದು ಸ್ಫೋಟಗೊಂಡಿದ್ದರಿಂದ ದುರಂತ ಸಂಭವಿಸಿದೆ ಎಂದು ವಿವರಿಸಿದ್ದಾರೆ.