ಕೃಷ್ಣಾ ನದಿ ನೀರು ಹಂಚಿಕೆ; ತೆಲಂಗಾಣದ ಮೇಲ್ಮನವಿ ಸುಪ್ರೀಂನಲ್ಲಿ ವಜಾ
Team Udayavani, Jan 9, 2017, 1:16 PM IST
ನವದೆಹಲಿ: ಕೃಷ್ಣಾ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೃಷ್ಣಾ ನದಿ ನ್ಯಾಯಾಧಿಕರಣದ ತೀರ್ಪನ್ನು ಪ್ರಶ್ನಿಸಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸುವ ಮೂಲಕ ಕೃಷ್ಣಾ ನ್ಯಾಯಾಧಿಕರಣದ ತೀರ್ಪನ್ನು ಎತ್ತಿಹಿಡಿದಿದೆ.
ಆಂಧ್ರಪ್ರದೇಶಕ್ಕೆ ನೀಡಲಾಗಿರುವ ನೀರನ್ನೇ ತೆಲಂಗಾಣವು ಹಂಚಿಕೊಳ್ಳಬೇಕು ಎಂದು ಕೃಷ್ಣಾ ನದಿ ನ್ಯಾಯಾಧಿಕರಣ ತೀರ್ಪು ನೀಡಿತ್ತು. ಆದರೆ ಆಂಧ್ರಪ್ರದೇಶಕ್ಕೆ ಹಂಚಿಕೆಯಾದ ನೀರನ್ನು ಬಳಸಿಕೊಳ್ಳಬೇಕು ಎಂಬ ತೀರ್ಪಿಗೆ ವಿರೋಧ ವ್ಯಕ್ತಪಡಿಸಿದ್ದ ತೆಲಂಗಾಣ ಸರ್ಕಾರ, ನೀರು ಮರು ಹಂಚಿಕೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿಯನ್ನು ವಜಾಗೊಳಿಸಿ, ಆಂಧ್ರಪ್ರದೇಶಕ್ಕೆ ಹಂಚಿಕೆಯಾದ ನೀರನ್ನು ಬಳಸಿಕೊಳ್ಳಬೇಕು. ಕೃಷ್ಣಾ ನದಿ ನೀರು ಮರು ಹಂಚಿಕೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿ, ನ್ಯಾಯಾಧಿಕರಣದ ತೀರ್ಪನ್ನು ಎತ್ತಿಹಿಡಿದಿದೆ.