ಮಧ್ಯಪ್ರದೇಶ “ಕೈ” ಸರ್ಕಾರ ಬಹುಮತ ಸಾಬೀತುಪಡಿಸಲಿ: ಗವರ್ನರ್ ಗೆ ಬಿಜೆಪಿ ಪತ್ರ
Team Udayavani, May 20, 2019, 3:19 PM IST
ನವದೆಹಲಿ:ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೂರ್ಣ ಬಹುಮತ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ಕರೆದು ಕಾಂಗ್ರೆಸ್ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಲು ಸೂಚನೆ ನೀಡಬೇಕೆಂದು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಗೆ ಬಿಜೆಪಿ ಪತ್ರ ಬರೆದಿದೆ.
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರಿತ್ತು. ಆದರೆ ಕಾಂಗ್ರೆಸ್ ಪಕ್ಷ ಎಸ್ಪಿ ಮತ್ತು ಬಿಎಸ್ಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿತ್ತು.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 114 ಸ್ಥಾನ ಪಡೆದಿತ್ತು. ಸರ್ಕಾರ ರಚಿಸಲು ಬಹುಮತದ ಸಂಖ್ಯೆ 116 ಸ್ಥಾನಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ಮಾಯಾವತಿ ನೇತೃತ್ವದ ಬಹುಜನ್ ಸಮಾಜವಾದಿ ಪಕ್ಷದ ಇಬ್ಬರು ಹಾಗೂ ಸಮಾಜವಾದಿ ಪಕ್ಷದ ಒಬ್ಬ ಶಾಸಕರ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿತ್ತು. ಬಿಜೆಪಿ 109 ಸ್ಥಾನ ಪಡೆದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.
ಕೂಡಲೇ ಮಧ್ಯಪ್ರದೇಶದಲ್ಲಿ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದೇವೆ. ನಮಗೆ ರೈತರ ಸಾಲಮನ್ನಾ ಹಾಗೂ ಸರ್ಕಾರದ ಬಲಾಬಲವನ್ನು ಪರೀಕ್ಷಿಸಬೇಕಾಗಿದೆ ಎಂದು ಮಧ್ಯಪ್ರದೇಶ ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಗೋಪಾಲ್ ಭಾರ್ಗವ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.