ದೆಹಲಿಯಲ್ಲಿ ಮಹಾಘಟಬಂಧನ್ ಇಲ್ಲ, ಆಪ್ ಜತೆ ಮೈತ್ರಿಗೆ ಕಾಂಗ್ರೆಸ್ ನಕಾರ!
Team Udayavani, Feb 25, 2019, 10:02 AM IST
ನವದೆಹಲಿ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳು ಮಹಾಘಟಬಂಧನ್ ಹೆಸರಿನಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದ್ದರೆ ಮತ್ತೊಂದೆಡೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಮೈತ್ರಿಯ ಬಾಗಿಲನ್ನು ಮುಚ್ಚಿರುವುದಾಗಿ ತಿಳಿಸಿದೆ.
ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಘಟಬಂಧನ್ ಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿರುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ಜೊತೆ ಸಾಕಷ್ಟು ಚರ್ಚೆ ನಡೆಸಿದ್ದೇವು. ಆದರೆ ಎಲ್ಲಾ ಬಾಗಿಲು ಮುಚ್ಚಿರುವುದರಿಂದ, ನಾವು ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ವಿಪಕ್ಷಗಳ ನಾಯಕರ ಮಹಾಘಟಬಂಧನ್ ಕೇವಲ ಮೋದಿ ವಿರೋಧಿ ಕೂಟವಲ್ಲ, ಅದೊಂದು ಸಮಯಸಾಧಕರ ಜನ ವಿರೋಧಿ ಕೂಟ ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವಾಗ್ದಾಳಿ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.