ಜಾಧವ್ ರನ್ನು ಭಾರತಕ್ಕೆ ವಾಪಸ್ ಕರೆತರಲು ಸರ್ವಪ್ರಯತ್ನ: ಲೋಕಸಭೇಲಿ ಜೈಶಂಕರ್
Team Udayavani, Jul 18, 2019, 2:47 PM IST
ನವದೆಹಲಿ:ಪಾಕಿಸ್ತಾನದಲ್ಲಿ ಬಂಧಿಯಾಗಿರುವ ಭಾರತದ ನಿವೃತ್ತ ನೌಕಾ ಅಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕ್ ಸೇನಾ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಪುನರ್ ಪರಿಶೀಲಿಸಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ(ಐಸಿಜೆ) ತೀರ್ಪು ನೀಡಿದ ಬಳಿಕ, ಪಾಕ್ ಕೂಡಲೇ ಜಾಧವ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಭಾರತ ಗುರುವಾರ ಆಗ್ರಹಿಸಿದೆ.
ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನ ಕೂಡಲೇ ಬಿಡುಗಡೆ ಮಾಡಬೇಕು, ಅಲ್ಲದೇ ಜಾಧವ್ ಅವರನ್ನು ಭಾರತಕ್ಕೆ ಕರೆತರಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಲೋಕಸಭೆಯ ಉಭಯ ಸದನಗಳಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈ ಶಂಕರ್ ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ಜಾಧವ್ ಅವರನ್ನು ಭೇಟಿಯಾಗುವ ಅವಕಾಶಕ್ಕೂ ತಡೆಯೊಡ್ಡಿತ್ತು. ಆದರೆ ಇದೀಗ ಅಂತಾರಾಷ್ಟ್ರೀಯ ನ್ಯಾಯಾಲಯ ಜಾಧವ್ ಅವರಿಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಎಲ್ಲ ರಾಜತಾಂತ್ರಿಕ ನೆರವು ಕಲ್ಪಿಸಿಕೊಡಬೇಕು ಎಂದು ತಿಳಿಸಿದೆ.
ಕುಲಭೂಷಣ್ ಜಾಧವ್ ನಿರಪರಾಧಿ, ಅವರ ಮೇಲೆ ಉದ್ದೇಶಪೂರ್ವಕವಾಗಿ ಆರೋಪ ಹೊರಿಸಲಾಗಿದೆ. ಅವರನ್ನು ಬಲವಂತವಾಗಿ ತಪ್ಪೊಪ್ಪಿಕೊಳ್ಳುವಂತೆ ಮಾಡಲಾಗಿದೆ. ಆದರೆ ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಜೈಶಂಕರ್ ತಿಳಿಸಿದ್ದಾರೆ.