ಜಮ್ಮು-ಕಾಶ್ಮೀರದಲ್ಲಿ ಆರ್ ಎಸ್ ಎಸ್ ನಾಯಕನ ಮೇಲೆ ಟೆರರಿಸ್ಟ್ ಅಟ್ಯಾಕ್
Team Udayavani, Apr 9, 2019, 1:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ಶ್ರೀನಗರ: ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರಗಾಮಿಗಳ ಗುಂಪೊಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರಾದ ಚಂದ್ರಕಾಂತ್ ಅವರ ಮೇಲೆ ಗುಂಡಿನ ದಾಳಿ ನಡೆಸಿದೆ. ಗುಂಡಿನ ದಾಳಿಯಲ್ಲಿ ಚಂದ್ರಕಾಂತ್ ಅವರ ಅಂಗರಕ್ಷಕ ಮತ್ತು ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಚಂದ್ರಕಾಂತ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂದೂಕುಧಾರಿ ವ್ಯಕ್ತಿಯೊಬ್ಬ ಆಸ್ಪತ್ರೆ ಒಳಗೆ ಪ್ರವೇಶಿಸಿ ಚಂದ್ರಕಾಂತ್ ಮತ್ತು ಅವರ ಅಂಗರಕ್ಷಕನ ಮೇಲೆ ಗುಂಡಿನ ದಾಳಿ ನಡೆಸಿದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಕಿಶ್ತ್ವಾರ್ ನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಅಧೀಕ್ಷಕರಾಗಿದ್ದ ಚಂದ್ರಕಾಂತ್ ಅವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲೇ ಈ ದಾಳಿ ನಡೆದಿದೆ. ಚಂದ್ರಕಾಂತ್ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಂದಿಗೆ ನಂಟು ಹೊಂದಿದ್ದರು. ಈ ಘಟನೆಯ ಬಳಿಕ ಇದೀಗ ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಕಳೆದ ವರ್ಷ ಈ ಜಿಲ್ಲೆಯಲ್ಲಿ ನಡೆದಿದ್ದ ಇಂತಹುದೇ ಒಂದು ಉಗ್ರದಾಳಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅನಿಲ್ ಪರಿಹಾರ್ ಮತ್ತು ಅವರ ಸಹೋದರ ಅಜಿತ್ ಅವರು ಗುಂಡಿನ ದಾಳಿಗೆ ಬಲಿಯಾಗಿದ್ದರು.