ಚಿನ್ನಸ್ವಾಮಿ ನಿರ್ವಹಣ ಮಂಡಳಿಗೆ 50 ಸಾವಿರ ರೂ. ದಂಡ ವಿಧಿಸಿದ ಪಾಲಿಕೆ
Team Udayavani, Jan 22, 2020, 12:14 AM IST
ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್ ಬಳಸಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ನಿರ್ವಹಣ ಮಂಡಳಿಗೆ ಪಾಲಿಕೆ 50 ಸಾವಿರ ರೂ. ದಂಡ ವಿಧಿಸಿದೆ.
ಜ. 19ರಂದು ನಡೆದ ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಏಕದಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫುಡ್ ಸ್ಟಾಲ್ಗಳಲ್ಲಿ ನಿಷೇಧಿತ ಪ್ಲಾಸ್ಟಿಕ್, ಕಪ್ಸ್ , ಬ್ಯಾನರ್ ಹಾಗೂ ಫ್ಲೆಕ್ಸ್ಗಳನ್ನು ಬಳಸಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿಗಳು ದಂಡ ವಿಧಿಸಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ಕುಮಾರ್ ತಿಳಿಸಿದ್ದಾರೆ.
ಪಂದ್ಯ ನಡೆಯುವ ವೇಳೆ ಸ್ವತ್ಛ ಸರ್ವೇಕ್ಷಣ್ ಬಗ್ಗೆ ಹಾಗೂ ಕಸ ವಿಲೇವಾರಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕೆ ಅವಕಾಶ ನೀಡಬೇಕು ಎಂದು ಬಿಬಿಎಂಪಿಯ ವಿಶೇಷ ಆಯುಕ್ತ ರಂದೀಪ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು. ಆದರೆ, ಜಾಗೃತಿಗೆ ಅವಕಾಶ ನೀಡುವುದಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿ ಅನುಮತಿ ನಿರಾಕರಿಸಿತ್ತು.