ಕಂಠೀರವದಲ್ಲಿ ಜಿಂದಾಲ್ ಫುಟ್ಬಾಲ್: ಹೈಕೋರ್ಟ್ ಕಿಡಿಕಿಡಿ
Team Udayavani, Jun 28, 2019, 5:41 AM IST
ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯಗಳನ್ನು ನಡೆಸಲು ಜಿಂದಾಲ್ ಸಮೂಹಕ್ಕೆ ಸೇರಿದ ‘ಜಿಂದಾಲ್ ಸೌಥ್ವೆಸ್ಟ್ ಬೆಂಗಳೂರು ಫುಟ್ಬಾಲ್ ಪ್ರೈವೇಟ್ ಲಿಮಿಟೆಡ್ ಕಂಪನಿ’ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಉಚ್ಚ ನ್ಯಾಯಾಲಯ ಗುರುವಾರ ತೀವ್ರ ಅಸಮಧಾನ ವ್ಯಕ್ತಪಡಿಸಿದೆ.
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಅರ್ಜುನ ಪ್ರಶಸ್ತಿ ವಿಜೇತೆ ಮಾಜಿ ಅಥ್ಲೀಟ್ ಅಶ್ವಿನಿ ನಾಚಪ್ಪ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ.ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ನ್ಯಾಯಾಲಯದ ಈ ಹೇಳಿಕೆ, ಕೆಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಅಥ್ಲೀಟ್ಗಳಿಗೆ ಭಾರೀ ಸಾಂತ್ವನ ನೀಡಿದೆ.
ಈ ವೇಳೆ ಕ್ರೀಡಾಂಗಣ ಸರ್ಕಾರದ ಸ್ವತ್ತು. ಹೀಗಿದ್ದಾಗ ಅದನ್ನು ಬಳಸಿಕೊಳ್ಳಲು ಖಾಸಗಿ ಸಂಸ್ಥೆಗೆ ಅನುಮತಿ ಕೊಟ್ಟು ಒಪ್ಪಂದ ಮಾಡಿಕೊಂಡಿದ್ದು ಹೇಗೆ? ಈ ವಿಚಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆಯೇ ಎಂದು ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿತು.
ಜಿಂದಾಲ್ ವಾದವೇನು?: ನ್ಯಾಯಾಲಯದ ಪ್ರಶ್ನೆಗಳನ್ನು ಕೇಳಿದ ನಂತರ ಜಿಂದಾಲ್ ಪರ ವಕೀಲರು ವಾದ ಮಂಡಿಸಿ, ಕಂಠೀರವ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯಾವಳಿ ಆಯೋಜನೆಗೆ ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ಸಿಂಥೆಟಿಕ್ ಟ್ರ್ಯಾಕ್ ಸೇರಿದಂತೆ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಅಭಿವೃದ್ಧಿಪಡಿಸಲು ಜಿಂದಾಲ್ 6 ಕೋಟಿ ರು. ಖರ್ಚು ಮಾಡಿದೆ. ಫುಟ್ಬಾಲ್ ಪಂದ್ಯಾವಳಿ ವೇಳೆ ಹೊರತುಪಡಿಸಿ ಉಳಿದ ಸಮಯದಲ್ಲಿ ಯಾವುದೇ ಕ್ರೀಡಾಪಟುವಾದರೂ ಕ್ರೀಡಾಂಗಣವನ್ನು ಬಳಸಬಹುದು. ಅದಕ್ಕೆ ಮುಕ್ತ ಅವಕಾಶವಿದೆ. ಅನುಮತಿ ನವೀಕರಣಕ್ಕೆ ಜಿಂದಾಲ್ ಕಂಪನಿ ಅರ್ಜಿ ಸಲ್ಲಿಸಿದೆ. ಅದನ್ನು ಸರ್ಕಾರ ಇನ್ನೂ ಪರಿಗಣಿಸಬೇಕಿದೆ. ಕ್ರೀಡಾಂಗಣ ಬಳಕೆಗೆ ಕಂಪನಿ ಸರ್ಕಾರಕ್ಕೆ ಹಣ ಪಾವತಿಸುತ್ತಿದೆ ಎಂದು ತಿಳಿಸಿದರು.
ಇದಕ್ಕೆ ಅಸಮಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಕ್ರೀಡಾಂಗಣ ಸರ್ಕಾರದ ಆಸ್ತಿ. ನಿಮಗೆ ನೀಡಲಾದ ಅನುಮತಿ ನವೀಕರಣ ಆಗಿಲ್ಲ. ಅನುಮತಿಯಿಲ್ಲದೇ ಸರ್ಕಾರದ ಆಸ್ತಿಯನ್ನು ಉಪಯೋಗಿಸಲು ಅವಕಾಶವಿಲ್ಲ. ಸರ್ಕಾರದ ಆಸ್ತಿಯನ್ನು ಖಾಸಗಿಯವರಿಗೆ ತಾತ್ಕಾಲಿಕವಾಗಿಯಷ್ಟೇ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳನ್ನು ನೀಡಿದೆ. ಒಂದೊಮ್ಮೆ ಸರ್ಕಾರ ಕ್ರೀಡಾಂಗಣವನ್ನು ಬಳಸಲು ಖಾಸಗಿಯವರಿಗೆ ಅನುಮತಿ ಕೊಟ್ಟರೆ, ನಿಯಮಗಳ ಪ್ರಕಾರ ಇತರ ಸಂಸ್ಥೆಗಳ ಜೊತೆಗೆ ಅರ್ಜಿ ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಿ ಎಂದು ತೀಕ್ಷ್ಣವಾಗಿ ಹೇಳಿತು.